ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಾಗೇಂದ್ರ ಇಂಗಿತ?; ಸಿಎಂ ಡಿಕೆಶಿ ಜೊತೆ ಚರ್ಚೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ನಾಗೇಂದ್ರ, ತಮ್ಮನ್ನು ಅನಗತ್ಯವಾಗಿ ಗುರಿಯಾಗಿಸಲಾಗುತ್ತಿದೆ. ಇದರಿಂದ ಪಕ್ಷಕ್ಕೆ ಮುಜುಗರ ಉಂಟಾಗುವುದು ಬೇಡ ಎಂದು ಹೇಳಿರುವುದಾಗಿ ತಿಳಿದುಬಂದಿದೆ. ನಾಗೇಂದ್ರ ಅವರೊಂದಿಗೆ ಮಾತುಕತೆ ನಡೆಸಿದ ಡಿ.ಕೆ.ಶಿವಕುಮಾರ್, ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತಂದು ಚರ್ಚಿಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಅಧಿವೇಶನ ಮೊಟಕು; ಸೆ.1ರಿಂದ ಬಿಜೆಪಿ ಪಾದಯಾತ್ರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಹಾಗೂ ಜೆಡಿಎಸ್ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಪಟ್ಟು ಹಿಡಿದಿವೆ. ಇದೇ ವಿಚಾರವಾಗಿ ಬಿಜೆಪಿ ಹಗಲು-ರಾತ್ರಿ ಧರಣಿ ನಡೆಸುವುದಾಗಿ ಘೋಷಿಸಿದ ಬೆನ್ನಲ್ಲೇ ವಿಧಾನಸಭೆ ಮುಂಗಾರು ಅಧಿವೇಶನವನ್ನು ಪೂರ್ಣಗೊಳ್ಳುವ ಮುನ್ನವೇ ಸ್ಥಗಿತಗೊಳಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.…

ವಿಜಯಪುರ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ 6 ಶವ ಪತ್ತೆ; ಕೌಟುಂಬಿಕ ಕಲಹದ ಶಂಕೆ

ವಿಜಯಪುರ: ನಗರದ ಹೊರವಲಯದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಮಂದಿಯ ಮೃತದೇಹಗಳು ಪತ್ತೆಯಾಗಿರುವ ಘಟನೆ ತೀವ್ರ ಆಘಾತ ಮೂಡಿಸಿದೆ. ಮೃತರಲ್ಲಿ ನಾಲ್ವರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆಗಸ್ಟ್ 24ರಿಂದ ನಾಪತ್ತೆಯಾಗಿದ್ದ ಶೋಭಾ ಜಾಲಗೇರಿ (45) ಮತ್ತು ಅವರ ಐವರು ಮಕ್ಕಳಾದ ವಿದ್ಯಾ (16), ಸುವರ್ಣ (14), ಗೌಡೇಶ್ (10), ವಿಕಾಸ (5) ಹಾಗೂ ಸಾನಿಕಾ (7) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೆರೆಯ ಅಂಚಿನಲ್ಲಿ ಮೃತದೇಹಗಳು ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ನಗರ ಡಿವೈಎಸ್ಪಿ ನಾಗರಾಜ್, ಆದರ್ಶ ನಗರ ಪಿಎಸ್ಐ ಸೀತಾರಾಮ ಲಮಾಣಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿ ಶವಗಳನ್ನು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆ ಹಾಗೂ ತನಿಖೆಯ ಬಳಿಕವಷ್ಟೇ ಸಾವಿನ ನಿಖರ ಕಾರಣ ತಿಳಿಯಲಿದೆ. ಆದರ್ಶ ನಗರ ಪೊಲೀಸ್…

ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

ಬೆಂಗಳೂರು: ಕೆಪಿಎಸ್‌ಸಿ ಅಕ್ರಮದ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದು, ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಬಂಧಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕು. ಭ್ರಷ್ಟಾಚಾರ ಹಾಗೂ ಅನ್ಯಾಯದ ವಿರುದ್ಧ ನ್ಯಾಯಯುತ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಸರ್ಕಾರ ಅಮಾನುಷವಾಗಿ ವರ್ತಿಸಿದೆ ಎಂದು ಟೀಕಿಸಿದರು. ಐಎಎಸ್ ಅಧಿಕಾರಿ ಜ್ಞಾನೇಂದ್ರ ಇ.ಡಿ. ತನಿಖೆಗೆ ಸಿಗದೆ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿದ ಅವರು, ಗೃಹ ಸಚಿವರು ಈ ವಿಚಾರದಲ್ಲಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು. ಉದ್ಯಾನವನಗಳ ಮೂಲ ಉದ್ದೇಶವನ್ನೇ ಬುಡಮೇಲು ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಸಿ.ಟಿ.ರವಿ ಆರೋಪಿಸಿದರು. ಗೋಮಾಳ ಮತ್ತು ಕೆರೆಗಳ ನಂತರ ಇದೀಗ ಸರ್ಕಾರದ ಕಣ್ಣು ಉದ್ಯಾನಗಳ ಮೇಲೆ ಬಿದ್ದಿದೆ…

‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

ಬೆಂಗಳೂರು: ಪ್ರತಿಪಕ್ಷದ ಪ್ರಶ್ನೆಗಳಿಗೆ ಉತ್ತರಿಸಲು ಹೆದರಿ ಕಾಂಗ್ರೆಸ್ ಸರ್ಕಾರ ವಿಧಾನಮಂಡಲ ಅಧಿವೇಶನವನ್ನು ಮುಂಚಿತವಾಗಿ ರದ್ದುಪಡಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್‌ನಲ್ಲೇ ನಡೆಯಬೇಕಿದ್ದ ಅಧಿವೇಶನ ಸಚಿವ ಸಂಪುಟದ ಆಂತರಿಕ ಭಿನ್ನಾಭಿಪ್ರಾಯದಿಂದ ತಡವಾಗಿ ಆರಂಭವಾಗಿತ್ತು. ಆದರೆ ಮೂರು ದಿನ ಮುಂಚಿತವಾಗಿಯೇ ಅಧಿವೇಶನವನ್ನು ರದ್ದುಪಡಿಸಿರುವುದು ಸರ್ಕಾರದ ಆಡಳಿತ ವೈಫಲ್ಯ ಎಂದು ಟೀಕಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರನ್ನು ರಕ್ಷಿಸಲು ಇಡೀ ಸದನದ ಕಲಾಪವನ್ನೇ ಮೊಟಕುಗೊಳಿಸಲಾಗಿದೆ ಎಂದು ಆರೋಪಿಸಿದ ಅವರು, ಬಿಜೆಪಿ ಅವಧಿಯಲ್ಲಿ ಆರೋಪ ಎದುರಾದಾಗ ಸಚಿವರಿಂದ ರಾಜೀನಾಮೆ ಪಡೆದು ಸದನದ ಕಲಾಪ ಮುಂದುವರಿಸಲಾಗಿತ್ತು ಎಂದರು. ಬರ ಪರಿಸ್ಥಿತಿ, ನೈಸ್ ಟೋಲ್ ಅಕ್ರಮ, ಕೆಪಿಎಸ್‌ಸಿ ಅಕ್ರಮ, ಬೆಂಗಳೂರಿನ ಕಸ ಟೆಂಡರ್, ಸುರಂಗ ರಸ್ತೆ ಯೋಜನೆ ಹಾಗೂ…

ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆಪ್ಟೆಂಬರ್ 1ರಿಂದ ರಾಯಚೂರು-ಬಳ್ಳಾರಿ ಪಾದಯಾತ್ರೆ ನಡೆಸುವುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಗಲು-ರಾತ್ರಿ ಧರಣಿ ನಡೆಸುವುದಾಗಿ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರ ಅಧಿವೇಶನವನ್ನು ರದ್ದು ಮಾಡಿದೆ ಎಂದು ಆರೋಪಿಸಿದರು. ಎಲ್ಲ ವಿಷಯಗಳ ಕುರಿತು ಚರ್ಚೆಗೆ ಬಿಜೆಪಿ ಸಿದ್ಧವಿದ್ದರೂ ಸರ್ಕಾರ ಅವಕಾಶ ನೀಡಲಿಲ್ಲ ಎಂದು ದೂರಿದರು. ಸಚಿವ ನಾಗೇಂದ್ರ ಅವರನ್ನು ರಕ್ಷಿಸುವ ಉದ್ದೇಶದಿಂದಲೇ ಅಧಿವೇಶನವನ್ನು ಮುಂಚಿತವಾಗಿ ರದ್ದುಪಡಿಸಲಾಗಿದೆ ಎಂದು ಆರೋಪಿಸಿದ ಅಶೋಕ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಪ ಎದುರಾದಾಗ ಸಚಿವರಿಂದ ರಾಜೀನಾಮೆ ಪಡೆದು ಸದನ ನಡೆಸಲಾಗಿತ್ತು. ಆದರೆ ಇದೀಗ ದಲಿತರ ಹಣಕ್ಕೆ ಸಂಬಂಧಿಸಿದ ಹಗರಣದ ಆರೋಪ ಎದುರಿಸುತ್ತಿರುವ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಸದನವನ್ನು ಮೊಟಕುಗೊಳಿಸಲಾಗಿದೆ ಎಂದರು. ಬರ ಪರಿಸ್ಥಿತಿ,…

ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ರಾಜ್ಯ ಸರ್ಕಾರದ ಇತ್ತೀಚಿನ ನಿರ್ಧಾರಗಳನ್ನು ಗಮನಿಸಿದರೆ ಅದರ ಆದ್ಯತೆಗಳ ಬಗ್ಗೆ ಗಂಭೀರ ಪ್ರಶ್ನೆಗಳು ಮೂಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಒಂದು ಕಡೆ ಒಂದು ಕೋಟಿ ಸಸಿ ನೆಡುವ ಕಾರ್ಯಕ್ರಮ ನಡೆಸಲಾಗುತ್ತಿದೆ. ಮತ್ತೊಂದೆಡೆ ಉದ್ಯಾನವನದ ಜಮೀನನ್ನು ರಿಯಲ್ ಎಸ್ಟೇಟ್ ಉದ್ದೇಶಕ್ಕೆ ಬಳಸುವ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ ಎಂದರು. ಮುಖ್ಯಮಂತ್ರಿಗಳ ಆದ್ಯತೆ ಬಿಡದಿ ಟೌನ್‌ಶಿಪ್, ಕನಕಪುರ ವಿಮಾನ ನಿಲ್ದಾಣ ಅಥವಾ ನೈಸ್ ಯೋಜನೆ ಸ್ವಾಧೀನವೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ರೈತರ ಸಂಕಷ್ಟ, ಬಡವರ ಸಮಸ್ಯೆ, ಯುವಕರ ಉದ್ಯೋಗ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಬೇಕಿದೆ ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಸುಮಾರು ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿಗೆ ಸರ್ಕಾರ ವೇಗ ನೀಡುತ್ತಿಲ್ಲ. ಮೀಸಲಾತಿ ವಿಚಾರದಲ್ಲಿ ಸ್ಪಷ್ಟ ನಿಲುವು ತೆಗೆದುಕೊಂಡು ಯುವಕರಿಗೆ ಉದ್ಯೋಗ ಕಲ್ಪಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು. ಒಬಿಸಿ…

ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

ಮಂಗಳೂರು: ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಒಂದು ದಿನ ಬಾಕಿ ಇರುವಂತೆ ನಟ ಯಶ್ ಕರಾವಳಿಯ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆಗಸ್ಟ್ 25ರಂದು ನಿರ್ಮಾಪಕ ವೆಂಕಟ್ ಅವರೊಂದಿಗೆ ಧರ್ಮಸ್ಥಳಕ್ಕೆ ಆಗಮಿಸಿದ ಯಶ್, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ನಂತರ ಯಶ್ ಹಾಗೂ ವೆಂಕಟ್ ಉಜಿರೆಯ ಸುರಿಯದಲ್ಲಿರುವ ಸದಾಶಿವರುದ್ರ ದೇವಾಲಯಕ್ಕೂ ಭೇಟಿ ನೀಡಿದರು. ‘ಕೆಜಿಎಫ್ 2’ ಬಿಡುಗಡೆ ಸಂದರ್ಭದಲ್ಲೂ ಯಶ್ ಈ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. 2024ರಲ್ಲೂ ಕುಟುಂಬ ಸಮೇತರಾಗಿ ದೇವಾಲಯಕ್ಕೆ ತೆರಳಿ ಹರಕೆ ಸಲ್ಲಿಸಿದ್ದರು. ಸಿನಿಮಾ ಬಿಡುಗಡೆಗೂ ಮುನ್ನ ದೇವಾಲಯಗಳಿಗೆ ಭೇಟಿ ನೀಡುವುದು ಯಶ್ ಪಾಲಿಸಿಕೊಂಡು ಬಂದಿರುವ ಸಂಪ್ರದಾಯವಾಗಿದೆ. ಇದೀಗ ‘ಟಾಕ್ಸಿಕ್’ ಬಿಡುಗಡೆ ಹಿನ್ನೆಲೆಯಲ್ಲಿ ಮತ್ತೊಮ್ಮೆ ಟೆಂಪಲ್ ರನ್ ಮಾಡಿರುವುದು ಅಭಿಮಾನಿಗಳ…

ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಹಾಗೂ ತೀವ್ರ ನೀರಿನ ಅಭಾವದ ಆತಂಕದ ಹಿನ್ನೆಲೆಯಲ್ಲಿ ಸರ್ಕಾರ ಮೋಡ ಬಿತ್ತನೆ ಕಾರ್ಯಕ್ಕೆ ಸಿದ್ಧತೆ ನಡೆಸಿದೆ. ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ ನಡೆಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಸುಮಾರು ₹27 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋಡ ಬಿತ್ತನೆಗೆ ಅಗತ್ಯವಿರುವ ಆಡಳಿತಾತ್ಮಕ ಸಿದ್ಧತೆಗಳು ಪೂರ್ಣಗೊಂಡಿವೆ. ಮೂರು ವಿಶೇಷ ಸಮಿತಿಗಳನ್ನು ರಚಿಸಲಾಗುತ್ತಿದ್ದು, ಮುಂದಿನ ಎರಡು-ಮೂರು ದಿನಗಳಲ್ಲಿ ಆರಂಭಿಕ ತಾಂತ್ರಿಕ ಪರೀಕ್ಷೆ ನಡೆಸಲಾಗುವುದು ಎಂದರು. ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಮಾನಿಟರಿಂಗ್ ಹಾಗೂ ತಾಂತ್ರಿಕ ಸಮಿತಿಗಳನ್ನು ರಚಿಸಿ, ಅವುಗಳ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಈಗಾಗಲೇ ಎರಡು ಉನ್ನತ ಮಟ್ಟದ ಸಭೆಗಳು ನಡೆದಿದ್ದು, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು. “ಶೇ.30ರಷ್ಟು ಯಶಸ್ಸು ಸಿಕ್ಕರೂ ಅನುಕೂಲವಾಗಲಿದೆ.…

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ

ಬೆಂಗಳೂರು: ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ಎ14 ಆರೋಪಿ ಪ್ರದೋಷ್ ಎಸ್. ರಾವ್ ಮಾಫಿ ಸಾಕ್ಷಿಯಾಗಲು 59ನೇ ಸಿಸಿಹೆಚ್ ನ್ಯಾಯಾಲಯ ಅನುಮತಿ ನೀಡಿದೆ. ಮಾಫಿ ಸಾಕ್ಷಿಯಾಗಲು ಪ್ರದೋಷ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದ್ದು, ಆಗಸ್ಟ್ 25ರಂದು ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಆದೇಶ ಹೊರಡಿಸಿದ್ದಾರೆ. ಪ್ರದೋಷ್‌ಗೆ ನ್ಯಾಯಾಲಯ ಕೆಲವು ಷರತ್ತುಗಳನ್ನು ವಿಧಿಸಿದೆ. ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೆ ಅವರು ಜೈಲಿನಲ್ಲೇ ಇರಬೇಕು. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ಸತ್ಯಾಂಶಗಳನ್ನು ಸಂಪೂರ್ಣವಾಗಿ ಬಹಿರಂಗಪಡಿಸಬೇಕು ಎಂದು ಸೂಚಿಸಲಾಗಿದೆ. ಯಾವುದೇ ವಿಚಾರವನ್ನು ಮುಚ್ಚಿಟ್ಟರೆ ಅಥವಾ ಸುಳ್ಳು ಸಾಕ್ಷ್ಯ ನೀಡಿದರೆ ಮಾಫಿ ಸಾಕ್ಷಿ ಸ್ಥಾನವನ್ನು ರದ್ದುಗೊಳಿಸಿ ಮತ್ತೆ ಆರೋಪಿಯನ್ನಾಗಿ ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಎಚ್ಚರಿಸಿದೆ. ಮಾಫಿ ಸಾಕ್ಷಿಯಾಗಲು ತಮ್ಮ ಮೇಲೆ ಯಾರಿಂದಲೂ ಪ್ರಭಾವ, ಒತ್ತಡ ಅಥವಾ ಬಲವಂತ ಇರಲಿಲ್ಲ…

ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು

ಚಿತ್ರದುರ್ಗ: ದಾವಣಗೆರೆ ಕಾಂಗ್ರೆಸ್ ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು  ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್‌ ಬಳಿ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಶಾಸಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಸಮರ್ಥ್ ಶಾಮನೂರು ಅವರು ಬೆಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ವೇಳೆ, ಸಂಡೂರು ಮೂಲದ ಸಂದೀಪ್ (45) ಎಂಬುವವರು ಚಲಾಯಿಸುತ್ತಿದ್ದ ಇನೋವಾ ಕಾರು ಕೆ.ಆರ್. ಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಶಾಸಕ ಸಮರ್ಥ್ ಅವರ ಕಾರು ಪಲ್ಟಿಯಾದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸಂದೀಪ್ ಗಾಯಗೊಂಡಿದ್ದು, ಅವರನ್ನು ತಕ್ಷಣ ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಶಾಸಕ ಸಮರ್ಥ್ ಶಾಮನೂರು ಅವರಿಗೆ ಯಾವುದೇ ಗಾಯಗಳಾಗಿಲ್ಲ. ಅಪಘಾತದ ಬಳಿಕ ಅವರು ಮತ್ತೊಂದು ಕಾರಿನಲ್ಲಿ ದಾವಣಗೆರೆಗೆ ಪ್ರಯಾಣ ಮುಂದುವರಿಸಿದ್ದಾರೆ.…