‘ಕಲಿಯುತ್ತಾ ನಲಿಯೋಣ’ ಶಾಲೆಗೇ ಹೋಗಲಾಗದ ಮಕ್ಕಳಿಗೆ ಆಕಾಶವಾಣಿ‌ಯಲ್ಲಿ ವಿನೂತನ ಕಾರ್ಯಕ್ರಮ

ಬೆಂಗಳೂರು: ಶಿಕ್ಷಣ ಇಲಾಖೆಯು ಆಕಾಶವಾಣಿ ಮೂಲಕ ಜನವರಿ 11 ರಿಂದ ‘ಕಲಿಯುತ್ತಾ ನಲಿಯೋಣ’ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ.

ಒಂದನೇ ತರಗತಿಯಿಂದ ನಾಲ್ಕನೇ ತರಗತಿಯವರೆಗೆ ಶಾಲೆಗೆ ಹೋಗಲಾರದ ಮಕ್ಕಳಿಗಾಗಿ ಇರುವ ನಲಿಕಲಿ ಮತ್ತು ‘ಕಲಿನಲಿ ಕಾರ್ಯಕ್ರಮಗಳನ್ನು ಜನವರಿ 11ರಿಂದ ಏಪ್ರಿಲ್ 5 ರ ವರೆಗೆ ಆಕಾಶವಾಣಿ ಪ್ರಸಾರ ಮಾಡಲಿದೆ. ಪ್ರತಿ ವಾರ ಸೋಮವಾರದಿಂದ ಶುಕ್ರವಾರದವರೆಗೂ ಪ್ರತಿನಿತ್ಯ ಬೆಳಿಗ್ಗೆ 10 ಗಂಟೆಯಿಂದ 10.15ರವರೆಗೆ ಒಂದು ಮತ್ತು ಎರಡನೇ ತರಗತಿಗಳಿಗಾಗಿ ಹಾಗೂ 10:15 ರಿಂದ 10.30 ಗಂಟೆಯವರೆಗೂ 3 ಮತ್ತು 4ನೇ ತರಗತಿಗಳಿಗಾಗಿ ಹಾಡು,  ಕಥೆ, ನಾಟಕ, ಸಂಭಾಷಣೆ, ಒಗಟು, ಮತ್ತು ವಿವಿಧ ಆಸಕ್ತಿಕರ ಕಾರ್ಯಕ್ರಮಗಳ ಮೂಲಕ ಆಯಾ ತರಗತಿಗಳ ಮಕ್ಕಳ ಕಲಿಕೆ ಮುಂದುವರಿಯುವಂತೆ ಮಾಡಲು ಶಿಕ್ಷಣ‌ ಇಲಾಖೆ ಈ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಶಿಕ್ಷಣ ಸಚಿವ ಸುರೇಶ ಕುಮಾರ್ ವಿವರಿಸಿದ್ದಾರೆ.

ಈ ಕಾರ್ಯಕ್ರಮಗಳ ಮೂಲಕ ನಲಿ-ಕಲಿಯ ಆಶಯಗಳಾದ ಆಲಿಸುವಿಕೆ, ವಸ್ತು ಗುರುತಿಸುವಿಕೆ, ಸ್ವ ಕಲಿಕೆ, ಸಂತಸದಾಯಕ ಕಲಿಕೆ, ಶಬ್ದ ಪರಿಚಯ… ಹೀಗೆ ಶಬ್ದಗಳ ಏರಿಳಿತದ ಮೂಲಕ ವಿಷಯಗಳನ್ನು ವಿನೂತನ ಮಾದರಿಯಲ್ಲಿ ತಿಳಿಸಲಾಗುತ್ತದೆ. ಒಂದರಿಂದ ನಾಲ್ಕನೇ ತರಗತಿಯವರೆಗೆ ಓದುತ್ತಿರುವ ಮಕ್ಕಳ ಎಲ್ಲಾ ಪೋಷಕರಿಗೆ ಈ ಕಾರ್ಯಕ್ರಮವನ್ನು ಮಕ್ಕಳೊಂದಿಗೆ ಆಲಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಪ್ರಸಾರಗೊಳ್ಳುವ  ಹಾಡು, ಕಥೆ ಇತ್ಯಾದಿಗಳನ್ನು ನಿಮ್ಮ ಮಕ್ಕಳಿಗೆ ಮತ್ತೊಮ್ಮೆ ಹೇಳುವುದರ ಮೂಲಕ ಹೇಳಿಸುವ ಮೂಲಕ ಮಕ್ಕಳಿಗೆ ನಲಿಯುವುದರ ಜೊತೆಗೆ ಕಲಿಯುವುದನ್ನು ಅಭ್ಯಾಸ ಮಾಡಿಸಿ ಎಂದವರು ಸಲಹೆ ಮಾಡಿದ್ದಾರೆ.

ಮಕ್ಕಳು ಹೇಳಿದ ಕತೆಗಳೂ ಪ್ರಸಾರ
ತಮ್ಮ ಮಕ್ಕಳಿಂದ ಯಾವುದಾದರೂ ಕತೆ ಹಾಡು ಒಗಟು ಹೇಳಬಹುದಾದರೆ whatsapp  ನಂಬರ್  9449417612 ಗೆ ಕಳಿಸಿದರೆ ಅದನ್ನು ಪ್ರಸಾರ ಮಾಡಲಾಗುವುದು. ಈ ಕಾರ್ಯಕ್ರಮ ರಾಜ್ಯದ 13 ಆಕಾಶವಾಣಿ ಕೇಂದ್ರಗಳಿಂದ ಪ್ರಸಾರವಾಗುತ್ತದೆ. ಮತ್ತು ನಂತರ ಈ ಕಾರ್ಯಕ್ರಮಗಳು ಯೂಟ್ಯೂಬ್ ನಲ್ಲಿ ಸಹ ಲಭ್ಯವಿರುತ್ತವೆ. ಈ ಎಳೆ ಕಂದಗಳ ಮನಸ್ಸುಗಳನ್ನು ವಿಕಸನಗೊಳಿಸುವ ಉದ್ದೇಶದಿಂದ ಪ್ರಾರಂಭಿಸಲಾಗುತ್ತಿರುವ ಈ ಕಾರ್ಯಕ್ರಮಕ್ಕೆ ತಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಸಚಿವ ಸುರೇಶ ಕುಮಾರ್ ಅವರು ಪೋಷಕರಲ್ಲಿ ಮನವಿ ಮಾಡಿದ್ದಾರೆ.

Related posts