ಮೈಸೂರು: ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂಬ ಬಿಜೆಪಿ ಆರೋಪ ಹಾಸ್ಯಾಸ್ಪದ. ಬಿಜೆಪಿ ಮಾತ್ರ ಏಕೆ ಇದನ್ನು ವಿರೋಧಿಸುತ್ತದೆ? ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಭಯಪಡಬೇಕು. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು.
ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ? ಶಾಂತಿ ಹಾಗೂ ಭ್ರಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದ್ದೇವೆ. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿಯೇ ಎಂದರು.
