ಪ್ರಧಾನಮಂತ್ರಿಯವರ ಪ್ಯಾಕೇಜ್ ಅಡಿಯಲ್ಲಿ ಉದ್ಯೋಗ, ಕೌಶಲ್ಯಾಭಿವೃದ್ಧಿ ಹಾಗೂ ಇಂಟರ್ನಶಿಪ್ ಯೋಜನೆಗಳಿಂದ ಸುಮಾರು 4.10 ಕೋಟಿ ಯುವಜನರಿಗೆ ಪ್ರಯೋಜನವಾಗಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಆಯೋಜಿಸಲಾದ ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದ ಅವರು, ರೈಲ್ವೆ ಇಲಾಖೆಯು ಮಿಷನ್ ಮೋಡ್ ನೇಮಕಾತಿ ಅಭಿಯಾನದಡಿಯಲ್ಲಿ 2014 ರಿಂದ 2024 ರವರೆಗೆ 5.02 ಲಕ್ಷ ಯುವಜನರಿಗೆ ಉದ್ಯೋಗಾವಕಾಶ ನೀಡಿದೆ ಎಂದು ತಿಳಿಸಿದರು.
ಪ್ರಧಾನಮಂತ್ರಿಯವರ ಆಶಯದಂತೆ ಉದ್ಯೋಗ ಸೃಷ್ಟಿಯ ಪ್ರಕ್ರಿಯೆಯನ್ನು ನಿರಂತರವಾಗಿ ನಡೆಸಲು ರೈಲ್ವೆ ಇಲಾಖೆಯು ವಾರ್ಷಿಕ ನೇಮಕಾತಿ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2024ರ ಜನವರಿಯಿಂದ ಇದುವರೆಗೆ ರೈಲ್ವೆ ಇಲಾಖೆಯಲ್ಲಿ ಸುಮಾರು 71,000 ಹುದ್ದೆಗಳನ್ನು ಸೃಷ್ಟಿಸಿದ್ದು ಇವುಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಅವರು ಹೇಳಿದರು. 2047ರಲ್ಲಿ ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅನೇಕ ಕ್ರಮಗಳನ್ನು ಸರ್ಕಾರ ಕೈಗೊಂಡಿದ್ದು, ಅದರಲ್ಲಿ ರಾಷ್ಟ್ರೀಯ ಉದ್ಯೋಗ ಮೇಳವೂ ಒಂದು, ಅದರ ಅಂಗವಾಗಿ 2022ರ ಅಕ್ಟೋಬರ್ ನಲ್ಲಿ ಪ್ರಧಾನಮಂತ್ರಿಯವರು 10 ಲಕ್ಷ ಉದ್ಯೋಗ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದರು ಎಂದು ಅವರು ಹೇಳಿದರು.
ಭಾರತವು 2025ರಲ್ಲಿ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಬೆಳೆಯುವ ಗುರಿ ಹೊಂದಿದ್ದು, 2030ರಲ್ಲಿ 7 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಮಹತ್ವಾಕಾಂಕ್ಷೆ ಹೊಂದಿದೆ. ಈ ನಿಟ್ಟಿನಲ್ಲಿ ನಮ್ಮ ಯುವ ಜನತೆಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಉದ್ಯೋಗಸೃಷ್ಟಿಗೆ ಸರ್ಕಾರ ಆದ್ಯತೆ ನೀಡಿದೆ. ಪ್ರಸಕ್ತ ಬಜೆಟ್ ನಲ್ಲಿ ಪ್ರಧಾನಮಂತ್ರಿಯವರ ಪ್ಯಾಕೇಜ್ ಅಡಿಯಲ್ಲಿ ಉದ್ಯೋಗ, ಕೌಶಲ್ಯಾಭಿವೃದ್ಧಿ ಹಾಗೂ ಇಂಟರ್ನ್ ಶಿಪ್ ಯೋಜನೆಗಳನ್ನು ಘೋಷಿಸಿದ್ದು, ಇದರಿಂದ ಸುಮಾರು 4.10 ಕೋಟಿ ಯುವಜನರಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.
ಭಾರತದ ಯುವ ಜನತೆಯನ್ನು ಸಬಲೀಕರಣಗೊಳಿಸಿ ಅವರ ಉದ್ಯಮಶೀಲತೆ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಪ್ರಧಾನಮಂತ್ರಿ ಮುದ್ರಾ ಯೋಜನೆ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ, ಪ್ರಧಾನಮಂತ್ರಿ ವಿಕಾಸ ಯೋಜನೆ ಇತ್ಯಾದಿ ಕ್ರಮಗಳನ್ನು ಕೈಗೊಳ್ಳಲಾಗಿದೆ. 2015 ರಲ್ಲಿ ಪ್ರಾರಂಭವಾದ ಪ್ರಧಾನಮಂತ್ರಿ ಮುದ್ರಾ ಯೋಜನೆಯಲ್ಲಿ ಇದುವರೆಗೆ 32.61 ಲಕ್ಷ ಕೋಟಿ ರೂಪಾಯಿ ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಈ ಪೈಕಿ ಕರ್ನಾಟಕದಲ್ಲಿ 3.02 ಲಕ್ಷ ಕೋಟಿ ರೂಪಾಯಿ ಸಾಲ ಒದಗಿಸಲಾಗಿದೆ. 2023 ರಲ್ಲಿ ಪ್ರಾರಂಭವಾದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಕರ್ನಾಟಕದ ಸುಮಾರು 1.09 ಲಕ್ಷ ಕುಶಲಕರ್ಮಿಗಳಿಗೆ ಸರ್ಕಾರದಿಂದ ಪ್ರೋತ್ಸಾಹ ನೀಡಲಾಗಿದೆ ಎಂದು ಸಚಿವರು ಹೇಳಿದರು.