ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರೌಡಿಸಂ ವಿರುದ್ಧ ಸಮರ ಸಾರಿದ್ದು, ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್ಗಳನ್ನು ರಚಿಸಲು ಆದೇಶಿಸಿದ್ದಾರೆ.
ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ, ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ಇಡಲು ಹಾಗೂ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ವಿಶೇಷ ತಂಡಗಳನ್ನು ಸ್ಥಾಪಿಸುವಂತೆ ಸೂಚನೆ ನೀಡಿದ್ದಾರೆ.

ನೂತನ ಸ್ಕ್ವಾಡ್ ಹೇಗಿರಲಿದೆ?
- ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್ ರಚನೆ
- ಪ್ರತಿ ತಂಡದಲ್ಲಿ 10 ರಿಂದ 15 ಪೊಲೀಸ್ ಕಾನ್ಸ್ಟೇಬಲ್ಗಳು
- ಹಳೆಯ ರೌಡಿಗಳ ಚಟುವಟಿಕೆಗಳ ಮೇಲೆ ನಿರಂತರ ನಿಗಾ
- ಅಪರಾಧ ಜಗತ್ತಿಗೆ ಹೊಸದಾಗಿ ಪ್ರವೇಶಿಸುವ ಯುವಕರ ಗುರುತಿಸುವಿಕೆ
- ರೌಡಿಗಳನ್ನು ಪತ್ತೆಹಚ್ಚಿ ಕಾನೂನಿನ ಚೌಕಟ್ಟಿಗೆ ತರುವುದು
- ಡ್ರಗ್ಸ್, ಗಾಂಜಾ, ಜೂಜಾಟ, ಮಟ್ಕಾ ಹಾಗೂ ಅಕ್ರಮ ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಿನ ಕ್ರಮ
- ಯಾವುದೇ ಕ್ರಿಮಿನಲ್ ಚಟುವಟಿಕೆಗೆ ಅವಕಾಶ ನೀಡದಂತೆ ಮೇಲ್ವಿಚಾರಣೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಪುಡಿ ರೌಡಿಗಳ ಹಾವಳಿ, ಡ್ರಗ್ಸ್ ಜಾಲ, ಅಕ್ರಮ ಮರಳು ದಂಧೆ, ಜೂಜಾಟ ಮತ್ತು ಮಟ್ಕಾ ಚಟುವಟಿಕೆಗಳು ಹೆಚ್ಚುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕೊಲೆ, ಸುಲಿಗೆ ಹಾಗೂ ಮಾದಕ ವಸ್ತುಗಳ ದಂಧೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕಠಿಣ ನಿಲುವು ತಾಳಿದೆ.
ಈ ಕುರಿತು ಮಾತನಾಡಿರುವ ಮುಖ್ಯಮಂತ್ರಿ, ರೌಡಿಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿ ಅಪರಾಧ ಚಟುವಟಿಕೆಗಳನ್ನು ಆರಂಭದಲ್ಲೇ ತಡೆಯುವುದು ವಿಶೇಷ ಸ್ಕ್ವಾಡ್ಗಳ ಪ್ರಮುಖ ಉದ್ದೇಶವಾಗಿದೆ ಎಂದು ಡಿಕೆಶಿ ಹೇಳಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸಲು ಈ ಕ್ರಮ ಸಹಕಾರಿಯಾಗಲಿದೆ ಎಂಬ ವಿಶ್ವಾಸವನ್ನು ಸರ್ಕಾರ ವ್ಯಕ್ತಪಡಿಸಿದೆ.

