ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್‌’ಗೆ ಸುನಿಲ್ ಜೋಶಿ ಹೆಸರು

ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ರಾಜ್ಯ ಮತ್ತು ರಾಷ್ಟ್ರೀಯ ತಂಡಗಳಿಗೆ ನೀಡಿದ ಸೇವೆಯನ್ನು ಗುರುತಿಸಿ, ಭಾರತದ ಮಾಜಿ ಎಡಗೈ ಸ್ಪಿನ್ನರ್ ಸುನಿಲ್ ಜೋಶಿ ಅವರ ಹೆಸರನ್ನು ಹುಬ್ಬಳ್ಳಿಯ ರಾಜನಗರ ಮೈದಾನದ ಪೆವಿಲಿಯನ್ ಬ್ಲಾಕ್‌ಗೆ ಇಡುವುದಾಗಿ ಪ್ರಕಟಿಸಿದೆ.

ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು–ಕಾಶ್ಮೀರ ತಂಡಗಳು ಮುಖಾಮುಖಿಯಾಗಲಿರುವ ಮೊದಲ ದಿನ ಮಧ್ಯಾಹ್ನ 12 ಗಂಟೆಗೆ ನಾಮಕರಣ ಸಮಾರಂಭ ನಡೆಯಲಿದೆ. ಉತ್ತರ ಕರ್ನಾಟಕದ ಗದಗ ಜಿಲ್ಲೆಯವರಾದ ಜೋಶಿ ಅವರು ಹುಬ್ಬಳ್ಳಿಯಲ್ಲಿ ತಮ್ಮ ಕ್ರಿಕೆಟ್ ಪಯಣವನ್ನು ರೂಪಿಸಿಕೊಂಡಿದ್ದು, ರಾಜ್ಯದ ಪ್ರಮುಖ ಕ್ರಿಕೆಟ್ ರಾಯಭಾರಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಕೆಎಸ್‌ಸಿಎ ತಿಳಿಸಿದೆ.

“ಪೆವಿಲಿಯನ್‌ಗೆ ಅವರ ಹೆಸರಿಡುವುದು ಅವರ ಸಾಧನೆಗಳಿಗೆ ಶಾಶ್ವತ ಗೌರವ ಸಲ್ಲಿಸುವುದರ ಜೊತೆಗೆ, ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಆಡುವ ಯುವಕರಿಗೆ ಸ್ಫೂರ್ತಿಯಾಗಲಿದೆ,” ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಕಾರ್ಯಕ್ರಮದಲ್ಲಿ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಹುಬ್ಬಳ್ಳಿ–ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭಾಗವಹಿಸಲಿದ್ದಾರೆ.

ಜೋಶಿ ಅವರು 1996ರಿಂದ 2001ರವರೆಗೆ 15 ಟೆಸ್ಟ್ ಹಾಗೂ 69 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. 2020–21ರಲ್ಲಿ ಆಸ್ಟ್ರೇಲಿಯಾದಲ್ಲಿ ಭಾರತ 2–1 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದ ಅವಧಿಯಲ್ಲಿ ಅವರು ಮುಖ್ಯ ಆಯ್ಕೆದಾರರಾಗಿದ್ದರು. 2020ರಿಂದ 2023ರವರೆಗೆ ಆಯ್ಕೆ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ ಬೌಲಿಂಗ್ ತರಬೇತುದಾರರಾಗಿದ್ದ ಅವರು, ದೇಶೀಯ ಕ್ರಿಕೆಟ್‌ನಲ್ಲಿ ಜಮ್ಮು–ಕಾಶ್ಮೀರ ಹಾಗೂ ಉತ್ತರ ಪ್ರದೇಶ ತಂಡಗಳಿಗೆ ತರಬೇತಿ ನೀಡಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ನಲ್ಲಿ ಸ್ಪಿನ್ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts