ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಮಧ್ಯಪ್ರದೇಶ ಸಂಪುಟ ಅಸ್ತು

ಭೋಪಾಲ್: ಮಧ್ಯಪ್ರದೇಶ ಸಚಿವ ಸಂಪುಟವು ಭಾನುವಾರ ನಡೆದ ವಿಶೇಷ ಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (Uniform Civil Code – UCC) ಮಸೂದೆಗೆ ಅನುಮೋದನೆ ನೀಡಿದೆ. ಭೋಪಾಲ್ ಸಮೀಪದ ಐತಿಹಾಸಿಕ ಜಗದೀಶಪುರದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಮೋಹನ್ ಯಾದವ್, ರಾಜ್ಯದ ಐತಿಹಾಸಿಕ ಪರಂಪರೆ ಮತ್ತು ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳನ್ನು ಖಚಿತಪಡಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ಯುಸಿಸಿ ಯಾವುದೇ ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ ಹಾಗೂ ಎಲ್ಲ ಧರ್ಮಗಳ ಜನರಿಗೆ ಸಮಾನ ಅವಕಾಶ ಮತ್ತು ಹಕ್ಕುಗಳನ್ನು ಒದಗಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಮಸೂದೆ ಸಿದ್ಧಪಡಿಸುವ ಮೊದಲು, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಸಮಿತಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾರ್ವಜನಿಕ ಸಮಾಲೋಚನೆ ನಡೆಸಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಾಮಾಜಿಕ ಸಂಘಟನೆಗಳು ಚರ್ಚೆಯಲ್ಲಿ ಭಾಗವಹಿಸಿದ್ದರೆ, ಕಾಂಗ್ರೆಸ್ ಪಕ್ಷ ಮಾತ್ರ ಸಮಾಲೋಚನೆಗಳಿಂದ ದೂರ ಉಳಿದಿದೆ ಎಂದು ಅವರು ಹೇಳಿದರು.

ಮುಸ್ಲಿಂ ಸಮುದಾಯದಲ್ಲಿಯೂ ಯುಸಿಸಿಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದು ಹೇಳಿದ ಮೋಹನ್ ಯಾದವ್, ಸಮಾಲೋಚನೆಯಲ್ಲಿ ಭಾಗವಹಿಸಿದ್ದ ಸುಮಾರು 80% ಮಹಿಳೆಯರು ಮತ್ತು 40% ಪುರುಷರು ಏಕರೂಪ ನಾಗರಿಕ ಸಂಹಿತೆಗೆ ಬೆಂಬಲ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಈ ನಿರ್ಧಾರವು ಪ್ರಧಾನಿ ನರೇಂದ್ರ ಮೋದಿ ಅವರ “ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್” ಪರಿಕಲ್ಪನೆ ಹಾಗೂ 2047ರೊಳಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿಗೆ ಪೂರಕವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಮಸೂದೆಯನ್ನು ಮುಂಬರುವ ಮಧ್ಯಪ್ರದೇಶ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದ್ದು, ಇದು ರಾಜ್ಯದಲ್ಲಿ ಕಾನೂನು ಏಕರೂಪತೆ ಮತ್ತು ಸಾಮಾಜಿಕ ನ್ಯಾಯದತ್ತ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.

Related posts