ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಐಪಿಎಲ್ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಅಸ್ವಸ್ಥರಾಗಿರುವ ಅನೇಕರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಆಸ್ಪತ್ರೆಗಳಿಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಗಾಯಾಳುಗಳ ಕ್ಷೇಮ ವಿಚಾರಿಸಿದರು.
ಕಾಲ್ತುಳಿತ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ವಿಜಯೇಂದ್ರ, ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ನಿರೀಕ್ಷೆ ಮೀರಿ ಜನಪ್ರವಾಹ ಹರಿದು ಬಂದ ಹಿನ್ನೆಲೆಯಲ್ಲಿ ಉಂಟಾಗಿರುವ ದುರಂತದಲ್ಲಿ 11 ಮಂದಿಗೂ ಹೆಚ್ಚು ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವುದು ಹಾಗೂ ಹಲವರು ಸಾವು ಬದುಕಿನ ನಡುವೆ ಹೋರಾಡುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದರು. ನೂರಾರು ಸಂಖ್ಯೆಯ ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಹೃದಯವಿದ್ರಾವಕ ಘಟನೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸುವಂತಾಗಿದೆ ಎಂದು ದುಃಖ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಈ ಕೂಡಲೇ ನೊಂದ ಕುಟುಂಬಗಳಿಗೆ ಆತ್ಮವಿಶ್ವಾಸ ತುಂಬಬೇಕು, ಸಾಂತ್ವನ ಹೇಳಬೇಕು ಹಾಗೂ ಸೂಕ್ತ ಪರಿಹಾರ ಘೋಷಿಸಬೇಕು, ಅಸ್ವಸ್ಥತೆಯಿಂದ ಚಿಕಿತ್ಸೆ ಅವಶ್ಯಕತೆ ಇರುವವರಿಗೆ ತಕ್ಷಣ ಸೂಕ್ತ ಚಿಕಿತ್ಸೆ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಜಯೆಂದ್ರ ಒತ್ತಾಯಿಸಿದರು.

ಆರ್‌ಸಿಬಿ ವಿಜಯದ ನಂತರ ಇಡೀ ರಾಜ್ಯದಲ್ಲಿ ಬೆಂಗಳೂರೂ ಸೇರಿದಂತೆ ಕೆಲ ಪ್ರಮುಖ ನಗರಗಳಲ್ಲಿ ಜನರು ವಿಜಯೋತ್ಸವದಲ್ಲಿ ಮುಳುಗಿದ್ದು ಅಭಿಮಾನಿಗಳ ಸಂಭ್ರಮಾಚರಣೆಯ ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸಲಾಗದ ಸ್ಥಿತಿ ನಿನ್ನೆಯೇ ಉದ್ಬವಿಸಿತ್ತು. ಈ ಹಿನ್ನೆಲೆಯಲ್ಲಿ ಇಂದೇ ಸಂಭ್ರಮಾಚರಣೆ ಆಚರಿಸುವ ಕುರಿತು ಸೇರಬಹುದಾದ ಜನರ ಲೆಕ್ಕಾಚಾರವನ್ನು ಅಂದಾಜಿಸಿ ಸರ್ಕಾರ ವಿವೇಚಿಸಿ ನಿರ್ಧಾರ ತೆಗೆದುಕೊಳ್ಳಬಹುದಾಗಿತ್ತು. ಆದರೆ ಆ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ಪರಿಸ್ಥಿತಿ ಕೈಮೀರುವ ಹಂತವನ್ನು ಅಂದಾಜಿಸಿ ಮತ್ತೊಂದು ದಿನಾಂಕವನ್ನು ನಿಗದಿಪಡಿಸಬಹುದಾಗಿತ್ತು, ಆದರೆ ಆತುರದ ನಿರ್ಧಾರದಿಂದ ಈ ರೀತಿಯ ದುರ್ಘಟನೆ ಸಂಭವಿಸಿದೆ. ಇದರ ಹೊಣೆ ಯಾರು ಹೊರಬೇಕು? ಎಂಬುದನ್ನು ಸರ್ಕಾರ ವಿವೇಚಿಸಲಿ. ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿಭಾಯಿಸಲಾಗದ ವೈಫಲ್ಯದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕೆಂದು ವಿಜಯೇಂದ್ರ ಒತ್ತಾಯಿಸಿದರು.

Related posts