ಬೆಂಗಳೂರು: ಕರ್ನಾಟಕದಲ್ಲಿ ಮಾನ್ಸೂನ್ ಮಳೆ ಮತ್ತಷ್ಟು ಚುರುಕಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮೀನುಗಾರರು ಹಾಗೂ ಕರಾವಳಿ ನಿವಾಸಿಗಳು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಕೂಡ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಧಾರವಾಡ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯೊಂದಿಗೆ 30ರಿಂದ 40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಗದಗ ಜಿಲ್ಲೆಯ ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

