ಗ್ಯಾರಂಟಿ ಹೆಸರಲ್ಲಿ ಜನರಿಂದ ಸುಲಿಗೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ: ಬಿಜೆಪಿ ನಾಯಕರ ಆರೋಪ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು 5 ಗ್ಯಾರಂಟಿಗಳ ಹೆಸರಿನಲ್ಲಿ 75 ಸಾವಿರ ಕೋಟಿಯನ್ನು ಜನರಿಂದ ಸುಲಿಗೆ ಮಾಡುತ್ತಿದೆÉ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 50 ಸಾವಿರ ಕೋಟಿ ಖರ್ಚು ಮಾಡುವುದಾಗಿ ಅವರೇ ಹೇಳಿದ್ದಾರೆ. ಈಗಾಗಲೇ ಜುಲೈ ಮುಗಿದಿದೆ. 50 ಸಾವಿರ ಕೋಟಿ ಕೊಡಲು ಹೋಗಿ ಜನರಿಗೆ 75 ಸಾವಿರ ಕೋಟಿ ಟೋಪಿ ಹಾಕುವ ಕೆಲಸವನ್ನು ಮಾಡುತ್ತಿದೆ. ಇದು ಖಂಡನೀಯ. ಇಂಥ ಮೋಸದಾಟ ಒಪ್ಪಲಸಾಧ್ಯ ಎಂದು ತಿಳಿಸಿದರು.

ನಿನ್ನೆ ಸಮಾಜ ಕಲ್ಯಾಣ ಇಲಾಖೆಯ ವಿಶೇóಷ ಅನುದಾನ ಸಂಬಂಧಿತ ಸಭೆ ಮಾಡಿ, ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ.ಯ 11 ಸಾವಿರ ಕೋಟಿ ರೂಪಾಯಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲು ಒಪ್ಪಿಗೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲೇ ಈ ಸಭೆ ಮಾಡಿದ್ದಾರೆ. ಸಂವಿಧಾನದ ಆಶಯ ಏನು? ಈ ದೇಶದಲ್ಲಿರುವ ದೀನದಲಿತರು, ಬಡವರು, ಶಿಕ್ಷಣ ವಂಚಿತರು, ಉದ್ಯೋಗದಲ್ಲಿ ಅವಕಾಶ ವಂಚಿತರು, ಕಡು ಬಡವರನ್ನು ಮೇಲೆತ್ತುವ ಕಾರ್ಯಕ್ರಮಗಳನ್ನು ಮಾಡಬೇಕು. ಮುಖ್ಯವಾಗಿ ಶಿಕ್ಷಣಕ್ಕೆ ಆದ್ಯತೆ ಕೊಡಬೇಕು. ಉದ್ಯೋಗ ನೀಡಿಕೆ, ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಬೇಕು. ಆರೋಗ್ಯಕ್ಕೆ ಅನುದಾನ ಕೊಡಬೇಕೆಂಬುದೇ ಸಂವಿಧಾನದ ಆಶಯ. ನಮ್ಮ ಸರಕಾರ ಇದ್ದಾಗ ಹಿಂದೆಯೂ ಕೂಡ ಗಂಗಾ ಕಲ್ಯಾಣ ಯೋಜನೆ, ಭೂಮಿ ಖರೀದಿ, ಮನೆಗಳ ನಿರ್ಮಾಣ, ಹಾಸ್ಟೆಲ್‍ಗಳು, ವಸತಿಶಾಲೆ ನಿರ್ಮಿಸಲು ಅನುದಾನ ನೀಡಿದ್ದೇವೆ. ಈ ಸರಕಾರ ಹಾಸ್ಟೆಲ್ ನಿರ್ಮಾಣ, ವಸತಿ ಶಾಲೆ ನಿರ್ಮಾಣಕ್ಕೆ ಒಂದೇ ಒಂದು ರೂಪಾಯಿ ಇಟ್ಟಿಲ್ಲ ಎಂದು ಟೀಕಿಸಿದರು.

ಎಸ್‍ಸಿ, ಎಸ್‍ಟಿ ಜನಾಂಗಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಶೇ 24 ಅನುದಾನ ಕೊಡುವ ಶ್ರೇಷ್ಠ ಕೆಲಸ ಮಾಡಿದ್ದಾಗಿ ಸಿದ್ದರಾಮಯ್ಯನವರು ಎದೆ ಬಡಿದುಕೊಳ್ಳುತ್ತಿದ್ದರು. ಅವರು ಮಾಡಿದ್ದಾದರೂ ಏನು ಎಂದು ಕೇಳಿದರು. 156 ವಸತಿ ಶಾಲೆಯ ಕಟ್ಟಡದ ಕಾಮಗಾರಿ ಕಳೆದ 3 ತಿಂಗಳಿನಿಂದ ನಿಲ್ಲಿಸಿದ್ದಾರೆ. 75 ಹಾಸ್ಟೆಲ್‍ಗಳ ನಿರ್ಮಾಣ ಕಾರ್ಯ ಸ್ಥಗಿತವಾಗಿದೆ. 108 ವಸತಿ ಶಾಲೆಗಳಿಗೆ ಪ್ರತಿ ಶಾಲೆಗೆ 10 ಎಕರೆಯಷ್ಟು ಭೂಮಿಯನ್ನು ನಾವು ನೀಡಿದ್ದೆವು. ಅವುಗಳಿಗೆ ಹಣ ಮಂಜೂರು ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಸಚಿವ ಮಹದೇವಪ್ಪನವರು ಸುಮ್ಮನೆ ರಾಜಕೀಯಕ್ಕೆ ಬಂದವರಲ್ಲ. ಅವರಿಗೆ ದಲಿತ ಸಂಘರ್ಷ ಸಮಿತಿ ಹೋರಾಟದ ಹಿನ್ನೆಲೆ ಇದೆ. ಅವರು ಯಾವುದೇ ಕಾರಣಕ್ಕೂ ಅನುದಾನ ಹೊಂದಾಣಿಕೆಯನ್ನು ಒಪ್ಪಬಾರದು ಎಂದು ಆಗ್ರಹಿಸಿದರು. ಒಲ್ಲದ, ಭಾರವಾದ ಮನಸ್ಸಿನಿಂದ ಇದನ್ನು ಒಪ್ಪಿಕೊಂಡಿದ್ದಾಗಿ ಮಹದೇವಪ್ಪನವರು ಹೇಳಿದ್ದನ್ನು ಕೆಲವು ಪತ್ರಿಕೆಯವರು ಪ್ರಕಟಿಸಿದ್ದಾರೆ. ಮಹದೇವಪ್ಪನವರು ಡಾ. ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಶಕ್ತಿಯಿಂದ ಇದಕ್ಕೆ ತಡೆ ಒಡ್ಡಬೇಕು ಎಂದು ಅವರು ಒತ್ತಾಯಿಸಿದರು.

ಎಸ್‍ಸಿ, ಎಸ್‍ಟಿ ಜನಾಂಗ ಕಡೆಗಣಿಸಿದರೆ ಹೋರಾಟ

ಬಡವರ ಮಕ್ಕಳಿಗೆ ಓದಲು ಅವಕಾಶ ಮಾಡಿಕೊಡಲು ಮೊಟ್ಟ ಮೊದಲು ಹಾಸ್ಟೆಲ್ ನಿರ್ಮಿಸಿಕೊಡಿ. ವಸತಿ ಶಾಲೆಗಳನ್ನು ಪೂರ್ಣಗೊಳಿಸಿ ಬಡವರ ಮಕ್ಕಳಿಗೆ ಅವಕಾಶ ಸಿಗುವಂತಾಗಲಿ. ಹಾಸ್ಟೆಲ್‍ನಲ್ಲಿ ಒಂದು ಕೊಠಡಿಯಲ್ಲಿ 20ರಿಂದ 30 ಹುಡುಗರನ್ನು ಕುರಿ ತುಂಬಿಸಿದಂತೆ ತುಂಬಿಸಿ ಓದಿಸಲು ಸಾಧ್ಯವಿಲ್ಲ. ಅವರಿಗೆ ನೀರು, ಶೌಚಾಲಯ, ವಿದ್ಯುತ್ ವ್ಯವಸ್ಥೆ ಸರಿಯಾಗಿಲ್ಲ. 11 ಸಾವಿರ ಕೋಟಿ ಪೈಕಿ 2,500 ಕೋಟಿಯನ್ನು ಹಾಸ್ಟೆಲ್ ಮತ್ತು ವಸತಿ ಶಾಲೆಗೆ ಕೊಡಬೇಕು ಎಂದು ಗೋವಿಂದ ಕಾರಜೋಳ ಅವರು ಆಗ್ರಹಿಸಿದರು.

ಭೂಮಿ ಖರೀದಿಗೆ 2,500 ಕೋಟಿ, ಗಂಗಾಕಲ್ಯಾಣ ಯೋಜನೆಗೆ 1 ಸಾವಿರ ಕೋಟಿ ಕೊಡಬೇಕು ಎಂದು ಒತ್ತಾಯಿಸಿದರು. ಬಸ್ಸಿನಲ್ಲಿ ಪುಕ್ಕಟೆ ಪ್ರಯಾಣ, ಉಚಿತ ವಿದ್ಯುತ್ ನೀಡಿದ್ದಾಗಿ ಹೇಳಿಕೊಂಡು ಅದನ್ನೆಲ್ಲ ಎಸ್‍ಸಿ, ಎಸ್‍ಟಿ ಖಾತೆಗೆ ಹಾಕುವುದು ಮೋಸದಾಟ ಎಂದು ಟೀಕಿಸಿದ ಅವರು, ಇದನ್ನು ಮಾಡಿದ್ದೇ ಆದರೆ, ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

Related posts