ಕೋಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆ (CAA) ಅಡಿಯಲ್ಲಿ ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದಿರುವ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಅವರ 125ನೇ ಜನ್ಮ ದಿನಾಚರಣೆ ಅಂಗವಾಗಿ ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೆರೆಯ ದೇಶಗಳಲ್ಲಿ ಧಾರ್ಮಿಕ ಹಿಂಸೆ ಅನುಭವಿಸಿ ಭಾರತಕ್ಕೆ ಬಂದ ಹಿಂದೂ ಹಾಗೂ ಇತರ ಅಲ್ಪಸಂಖ್ಯಾತ ನಿರಾಶ್ರಿತರಿಗೆ ಸಿಎಎ ಮೂಲಕ ಪೌರತ್ವ ನೀಡಲಾಗುವುದು ಎಂದು ಭರವಸೆ ನೀಡಿದರು.
1950ರ ಲಿಯಾಕತ್–ನೆಹರು ಒಪ್ಪಂದವು ಪಾಕಿಸ್ತಾನ ಹಾಗೂ ಪೂರ್ವ ಪಾಕಿಸ್ತಾನದಲ್ಲಿದ್ದ (ಈಗಿನ ಬಾಂಗ್ಲಾದೇಶ) ಹಿಂದೂ ಅಲ್ಪಸಂಖ್ಯಾತರ ಹಿತಾಸಕ್ತಿಯನ್ನು ಸಮರ್ಪಕವಾಗಿ ರಕ್ಷಿಸಲು ವಿಫಲವಾಗಿದೆ ಎಂದು ಶ್ಯಾಮ ಪ್ರಸಾದ್ ಮುಖರ್ಜಿ ಅಂದೇ ಪ್ರತಿಪಾದಿಸಿದ್ದರು ಎಂದು ಶಾ ಹೇಳಿದರು.

ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ಕಾರ್ಯವೈಖರಿಯನ್ನೂ ಶ್ಲಾಘಿಸಿದ ಅಮಿತ್ ಶಾ, ಸಮಾಜವಿರೋಧಿ ಹಾಗೂ ಭ್ರಷ್ಟ ಅಂಶಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆಯನ್ನು ಸರ್ಕಾರ ಈಡೇರಿಸುತ್ತಿದೆ ಎಂದು ಹೇಳಿದರು. ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಅನಿವಾರ್ಯ ಎಂದೂ ಎಚ್ಚರಿಕೆ ನೀಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ವರ್ಚುವಲ್ ಮೂಲಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜೀವನವು ದೇಶದಲ್ಲಿ ಪರ್ಯಾಯ ರಾಜಕೀಯ ಚಿಂತನೆಗೆ ನಾಂದಿ ಹಾಡಿತು ಎಂದು ಹೇಳಿದರು. ಕಾಂಗ್ರೆಸ್ ಪ್ರಾಬಲ್ಯದ ಕಾಲದಲ್ಲಿಯೇ ಭಾರತೀಯ ಜನಸಂಘವನ್ನು ಸ್ಥಾಪಿಸುವ ಮೂಲಕ ಅವರು ಹೊಸ ತಾತ್ವಿಕ ಚಳವಳಿಗೆ ಅಡಿಪಾಯ ಹಾಕಿದರು ಎಂದು ಪ್ರಧಾನಿ ಹೇಳಿದರು.

