ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆಚ್ಚುವರಿ ಖಾತೆಗಳ ಜವಾಬ್ದಾರಿ ನೀಡಲಾಗಿದೆ.
ಈ ಕುರಿತು ರಾಜಭವನ ಕರ್ನಾಟಕ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರ ಇಲಾಖೆಯ ಹೆಚ್ಚುವರಿ ಹೊಣೆಯನ್ನು ಸಚಿವ ಕೆ. ವೆಂಕಟೇಶ್ ಅವರಿಗೆ ವಹಿಸಲಾಗಿದೆ.
ಇನ್ನೊಂದೆಡೆ, ಕೆ. ಎನ್. ರಾಜಣ್ಣ ರಾಜೀನಾಮೆಯಿಂದ ತೆರವಾಗಿದ್ದ ಸಹಕಾರ ಇಲಾಖೆ ಹಾಗೂ ಬಿ. ನಾಗೇಂದ್ರ ರಾಜೀನಾಮೆಯಿಂದ ಖಾಲಿಯಾಗಿದ್ದ ಯುವಜನ ಸೇವೆ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.
ಪ್ರಸ್ತುತ ಸಿದ್ದರಾಮಯ್ಯ ಅವರು ಹಣಕಾಸು, ಸಂಸದೀಯ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ, ವಾರ್ತಾ ಇಲಾಖೆ ಸೇರಿದಂತೆ ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಸಹಕಾರ ಇಲಾಖೆಗಳ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದಾರೆ.
