ಬೆಂಗಳೂರು: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ರೂಪಿಸಿದೆ. ಇಂತಹ ವಿಧೇಯಕಗಳ ಸಾಧಕ-ಬಾಧಕಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಹತ್ತಾರು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದರು ಎಂದರು.
ರಾಜಭವನ ಎಂದರೆ ಬಿಜೆಪಿ ಕಚೇರಿ ಎನ್ನುವುದು ಹಳಸಿದ ಮಾತು. ವಿಧೇಯಕವನ್ನು ಮರಳಿ ಕಳುಹಿಸಿದರೆ ಅದಕ್ಕೆ ಸರ್ಕಾರ ಸ್ಪಷ್ಟೀಕರಣ ಕೊಟ್ಟು ಗೊಂದಲ ನಿವಾರಿಸಬೇಕು. ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುವುದು ಸರ್ಕಾರದ ಕರ್ತವ್ಯ. ಈ ಕರ್ತವ್ಯ ಮಾಡದೇ ಇದ್ದಲ್ಲಿ ಅದು ಸರ್ಕಾರದ ನಿರ್ಲಕ್ಷ್ಯವೇ ಹೊರತು ರಾಜ್ಯಪಾಲರ ತಪ್ಪಲ್ಲ. ಸರ್ಕಾರ ತಪ್ಪು ಮಾಡಿ ಅದನ್ನು ರಾಜ್ಯಪಾಲರ ಮೇಲೆ ಹೇರುವುದು ಸರಿಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದರು.
ರಾಜ್ಯದಲ್ಲಿ ಮೊದಲಿನಿಂದಲೂ ಹಿಂದೂಗಳಿಗೆ ರಕ್ಷಣೆ ಇಲ್ಲ. ಬಾಂಗ್ಲಾದಂತೆ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತೇವೆ ಎಂದು ಕಾಂಗ್ರೆಸ್ ಶಾಸಕ ಐವನ್ ಡಿಸೋಜ ಹೇಳಿದ್ದಾರೆ. ಅದಕ್ಕೆ ಹಿರಿಯ ನಾಯಕರು ಏನೂ ಸ್ಪಷ್ಟನೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ, ಅರಮನೆ ಮೈದಾನದಲ್ಲಿ ನಡೆದ, ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದ ಆರ್.ಅಶೋಕ, ಕಾಂಗ್ರೆಸ್ ನಲ್ಲಿ ಕುಟುಂಬದ ಕುಡಿ ಇದ್ದರೆ ಮಾತ್ರ ಇಡೀ ಪಕ್ಷ ಜೀವಂತವಾಗಿರುತ್ತದೆ. ಆದರೆ ಬಿಜೆಪಿ ಕಾರ್ಯಕರ್ತರಿಂದ ನಡೆಯುವ ಪಕ್ಷ. ಇಲ್ಲಿ ಕಾರ್ಯಕರ್ತರೇ ಮುಖ್ಯ. ಸದಸ್ಯತ್ವದ ಅಭಿಯಾನ ಮಾಡಿದರೆ ಒಬ್ಬ ವ್ಯಕ್ತಿಯನ್ನು ಬಿಜೆಪಿಗೆ ಬದ್ಧತೆಯಿಂದ ಸೇರಿಸಿದಂತಾಗುತ್ತದೆ ಎಂದರು.
ಕಾಂಗ್ರೆಸ್ ಸರ್ಕಾರದ ದೋಷಗಳ ವಿರುದ್ಧ ಬಿಜೆಪಿ ನಿರಂತರವಾಗಿ ಹೋರಾಟ ಮಾಡುತ್ತಿದೆ. ಗ್ಯಾರಂಟಿಗಳ ಮೋಸದ ವಿರುದ್ಧ ಹೋರಾಟ, ಭ್ರಷ್ಟಾಚಾರದ ವಿರುದ್ಧ ಪಾದಯಾತ್ರೆ ಮೊದಲಾದವುಗಳ ಮೂಲಕ ಬಿಜೆಪಿ ಸಮರ್ಥವಾಗಿ ಕೆಲಸ ಮಾಡುತ್ತಿದೆ. 136 ಶಾಸಕರ ಬಲವಿದ್ದರೂ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಉತ್ತರ ನೀಡದೆ ಪಲಾಯನ ಮಾಡಿದ್ದಾರೆ. ಬಿಜೆಪಿಯ ಹೋರಾಟದ ಫಲವಾಗಿ ಕಾಂಗ್ರೆಸ್ ಸರ್ಕಾರ ಈಗ ನಡುಗುತ್ತಿದೆ. ಈ ಮೂಲಕ ಪಕ್ಷ ಬಲವಾಗಿದೆ ಎಂದರು.
ಬಿಜೆಪಿಯನ್ನು ಸದಸ್ಯತ್ವ ಅಭಿಯಾನದ ಮೂಲಕ ಇನ್ನಷ್ಟು ಬಲಗೊಳಿಸಬೇಕು. ಹೆಚ್ಚು ಜನರನ್ನು ಪಕ್ಷಕ್ಕೆ ಸೇರಿಸಬೇಕು ಎಂದು ಸಲಹೆ ನೀಡಿದರು.