ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ರಾಜ್ಯ ಸರ್ಕಾರದ ಇತ್ತೀಚಿನ ನಿರ್ಧಾರಗಳನ್ನು ಗಮನಿಸಿದರೆ ಅದರ ಆದ್ಯತೆಗಳ ಬಗ್ಗೆ ಗಂಭೀರ ಪ್ರಶ್ನೆಗಳು ಮೂಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಒಂದು ಕಡೆ ಒಂದು ಕೋಟಿ ಸಸಿ ನೆಡುವ ಕಾರ್ಯಕ್ರಮ ನಡೆಸಲಾಗುತ್ತಿದೆ. ಮತ್ತೊಂದೆಡೆ ಉದ್ಯಾನವನದ ಜಮೀನನ್ನು ರಿಯಲ್ ಎಸ್ಟೇಟ್ ಉದ್ದೇಶಕ್ಕೆ ಬಳಸುವ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ ಎಂದರು.

ಮುಖ್ಯಮಂತ್ರಿಗಳ ಆದ್ಯತೆ ಬಿಡದಿ ಟೌನ್‌ಶಿಪ್, ಕನಕಪುರ ವಿಮಾನ ನಿಲ್ದಾಣ ಅಥವಾ ನೈಸ್ ಯೋಜನೆ ಸ್ವಾಧೀನವೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ರೈತರ ಸಂಕಷ್ಟ, ಬಡವರ ಸಮಸ್ಯೆ, ಯುವಕರ ಉದ್ಯೋಗ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಬೇಕಿದೆ ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಸುಮಾರು ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿಗೆ ಸರ್ಕಾರ ವೇಗ ನೀಡುತ್ತಿಲ್ಲ. ಮೀಸಲಾತಿ ವಿಚಾರದಲ್ಲಿ ಸ್ಪಷ್ಟ ನಿಲುವು ತೆಗೆದುಕೊಂಡು ಯುವಕರಿಗೆ ಉದ್ಯೋಗ ಕಲ್ಪಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು. ಒಬಿಸಿ ಮೀಸಲಾತಿ ಸೇರಿದಂತೆ ವಿವಿಧ ಮೀಸಲಾತಿ ವಿಚಾರಗಳಲ್ಲೂ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದರು.

ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟದಲ್ಲಿದ್ದು, ಉತ್ತರ ಕರ್ನಾಟಕದ ಸಮಸ್ಯೆಗಳು ಹಾಗೂ ನೀರಾವರಿ ಯೋಜನೆಗಳಿಗೆ ಸರ್ಕಾರ ಆದ್ಯತೆ ನೀಡಬೇಕು. ಬಡವರಿಗೆ ಮನೆ, ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ ವೈಫಲ್ಯ, ಭ್ರಷ್ಟಾಚಾರ, ರೈತರು, ಬಡವರು ಮತ್ತು ಯುವಕರ ಸಮಸ್ಯೆ, ಮೀಸಲಾತಿ ಹಾಗೂ ಉತ್ತರ ಕರ್ನಾಟಕದ ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳನ್ನು ಜನರ ಮುಂದಿಡಲು ಸೆಪ್ಟೆಂಬರ್ 1ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿವರೆಗೆ ಸುಮಾರು 190-200 ಕಿ.ಮೀ. ಪಾದಯಾತ್ರೆ ನಡೆಸಲಾಗುವುದು ಎಂದು ವಿಜಯೇಂದ್ರ ತಿಳಿಸಿದರು.

ಸೆ.1ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪಾದಯಾತ್ರೆಗೆ ಚಾಲನೆ ನೀಡಲಿದ್ದು, ಸಮಾರೋಪದಲ್ಲೂ ಕೇಂದ್ರದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಜೆಡಿಎಸ್ ಕೂಡ ಉದ್ಘಾಟನೆ ಹಾಗೂ ಸಮಾರೋಪ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದೆ ಎಂದರು.

ಜನವಿರೋಧಿ, ರೈತ ವಿರೋಧಿ ಹಾಗೂ ಅಭಿವೃದ್ಧಿ ವಿರೋಧಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ಬಯಲಿಗೆಳೆಯುವುದು ಪಾದಯಾತ್ರೆಯ ಉದ್ದೇಶ. ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ವಿಜಯೇಂದ್ರ ಹೇಳಿದರು.

Related posts