ಹೊಸಕೋಟೆ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಗಡುವು

ಬೆಂಗಳೂರು: ಹೊಸಕೋಟೆಯ ಏತ ನೀರಾವರಿ ಯೋಜನೆಯ 43 ಕೆರೆಗಳಿಗೆ ಸಂಸ್ಕರಿಸಿದ ನೀರನ್ನ ಹರಿಸುವ ಮಹತ್ವಾಕಾಂಕ್ಷಿ ಯೋಜನೆಯ ಕಾಮಗಾರಿಯನ್ನು ಅಕ್ಟೋಬರ್‌ 31 ರ ಒಳಗಾಗಿ ಮುಗಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌ ಬೋಸರಾಜು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ಯೋಜನೆಯ ಕಾಮಗಾರಿಗಳ ಕುರಿತಾಗಿ ಅಧಿಕಾರಿಗಳೊಂದಿಗೆ ವಿಸ್ತ್ರತ ಸಭೆಯನ್ನು ನಡೆಸಿದ ಅವರು, ಕಾಮಗಾರಿಗಳ ಪ್ರಸ್ತುತ ಹಂತದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಹೊಸಕೋಟೆ ಏತ ನೀರಾವರಿ ಯೋಜನೆಯನ್ನ 28/09/2022 ರ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವ ಷರತ್ತನ್ನ ವಿಧಿಸಿ ಟೆಂಡರ ನೀಡಲಾಗಿತ್ತು. ಆದರೆ, ಕಾಮಗಾರಿಗೆ ನೀಡಿದ್ದ ಅವಧಿ ಮುಗಿದು 10 ತಿಂಗಳು ಹೆಚ್ಚಾಗಿದೆ. ಕಾಮಗಾರಿಯನ್ನು ಸಮಯಾವಕಾಶದಲ್ಲಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲದಿರುವ ಬಗ್ಗೆ ಸಚಿವರು ಬೇಸರ ವ್ಯಕ್ತಪಡಿಸಿದರು.

ಗುತ್ತಿಗೆದಾರರ ಕಾಮಗಾರಿಯನ್ನು ಆಯಾ ಸಮಯದಲ್ಲಿ ಪರಿಶೀಲನೆ ನಡೆಸಿ, ಕಾಮಗಾರಿಯ ಪ್ರಗತಿಯನ್ನ ಪರಿಶೀಲಿಸುವುದು ಅಧಿಕಾರಿಗಳ ಕರ್ತವ್ಯ. ಕಾಮಗಾರಿ ವೇಗ ಕಡಿಮೆಯಾದಾಗ ಎಚ್ಚರಿಸುವ ಮೂಲಕ ಅದನ್ನು ಪೂರ್ಣಗೊಳಿಸಬೇಕು. ಬಾಕಿ ಇರುವ ಕಾಮಗಾರಿಗಳನ್ನು ಅಕ್ಟೋಬರ್‌ 31 ರ ಒಳಗಾಗಿ ಪೂರ್ಣಗೊಳಿಸಬೇಕು ಈ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಏತ ನೀರಾವರಿ ಯೋಜನೆಯ ಅಡಿಯಲ್ಲಿನ 2 ಕಿಲೋಮೀಟರ್‌ ಪೈಪ್‌ಲೈನ್‌ ಕಾಮಗಾರಿ ಪ್ರಾರಂಭಿಸಲು ಇದ್ದಂತಹ ಅಡೆತಡೆಗಳನ್ನು ಸಭೆಯಲ್ಲಿ ನಿವಾರಿಸಲಾಯಿತು. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಭೆಯಲ್ಲಿ ಮಾತನಾಡಿ ಇಲಾಖೆಯ ವತಿಯಿಂದ ಈಗಾಗಲೇ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ. ಸೋಮವಾರದಿಂದ ಕಾಮಗಾರಿ ಪ್ರಾರಂಭಿಸಬಹುದಾಗಿದೆ ಎಂದು ಹೇಳಿದರು.

ಹೆಬ್ಬಾಳ – ನಾಗವಾರ ವ್ಯಾಲಿ ಯೋಜನೆಯ ಬಾಕಿ ಕಾಮಗಾರಿಗಳ ವೇಗವನ್ನು ಹೆಚ್ಚಿಸಿಕೊಳ್ಳಬೇಕು. ಸೆಪ್ಟೆಂಬರ್‌ 15 ರಂದು ಮತ್ತೊಮ್ಮೆ ಕಾಮಗಾರಿ ಪರಿಶೀಲನೆ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.

Related posts