ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮನೆಯಲ್ಲಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಿಲನ, ಆರ್ಕೆಸ್ಟ್ರಾ ಮೈಸೂರು, ಯು ಟರ್ನ್ ಹಾಗೂ ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು ಸೇರಿದಂತೆ ಹಲವು ಸಿನಿಮಾಗಳಲ್ಲಿ ದಿಲೀಪ್ ರಾಜ್ ಅಭಿನಯಿಸಿದ್ದರು. ಸಿನಿಮಾ ಜೊತೆಗೆ ಕಿರುತೆರೆಯಲ್ಲೂ ಅವರು ಗುರುತಿಸಿಕೊಂಡಿದ್ದರು. ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ಅಭಿನಯಿಸಿದ್ದ ಅವರು, ಪಾರು ಮತ್ತು ನಾ ನಿನ್ನ ಬಿಡಲಾರೆ ಧಾರಾವಾಹಿಗಳನ್ನು ನಿರ್ಮಿಸಿದ್ದರು. ದಿಲೀಪ್ ರಾಜ್ ನಿಧನಕ್ಕೆ ಚಿತ್ರರಂಗದ ಗಣ್ಯರು, ಸಹ ಕಲಾವಿದರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಐಪಿಎಲ್‌: ಸನ್‌ರೈಸರ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಭರ್ಜರಿ ಜಯ

ಅಹಮದಾಬಾದ್: ಗುಜರಾತ್ ಟೈಟಾನ್ಸ್ ತಂಡವು ಐಪಿಎಲ್‌ನ 56ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 82 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್‌ಗಳಲ್ಲಿ 168 ರನ್ ಕಲೆಹಾಕಿತು. ಸಾಯಿ ಸುದರ್ಶನ್ 42 ಎಸೆತಗಳಲ್ಲಿ 61 ರನ್ ಸಿಡಿಸಿದರೆ, ವಾಷಿಂಗ್ಟನ್ ಸುಂದರ್ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ತಂಡಕ್ಕೆ ಬಲ ತುಂಬಿದರು. 169 ರನ್‌ಗಳ ಗುರಿ ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ಬ್ಯಾಟರ್‌ಗಳು ಆರಂಭದಿಂದಲೇ ಒತ್ತಡಕ್ಕೆ ಒಳಗಾದರು. ಗುಜರಾತ್ ಬೌಲರ್‌ಗಳ ದಾಳಿಗೆ ತತ್ತರಿಸಿದ ತಂಡ 14.5 ಓವರ್‌ಗಳಲ್ಲಿ ಕೇವಲ 86 ರನ್‌ಗಳಿಗೆ ಆಲೌಟ್ ಆಯಿತು. ಈ ಗೆಲುವಿನೊಂದಿಗೆ ಗುಜರಾತ್ ಟೈಟಾನ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.