ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

ಬೆಂಗಳೂರು: ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ವಿಧಾನಸಭೆಗೆ ತಿಳಿಸಿದ್ದಾರೆ.

ಗುರುವಾರ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ದಿನಕರ್ ಕೇಶವಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೌಲಭ್ಯ ಕಲ್ಪಿಸಲಾಗುತ್ತದೆ. ಕ್ಯಾನ್ಸರ್‌ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. ಖಾಲಿ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಇಬ್ಬರು ವೈದ್ಯರು ಮಾತ್ರ ಅರ್ಜಿ ಹಾಕಿದ್ದರು ಎಂದರು.

ತಾಲೂಕು ಕೇಂದ್ರಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವುದಿಲ್ಲ. ಹಾಗೆಯೇ ಕುಮಟಾ ತಾಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಉತ್ತರ ಕನ್ನಡ ಜಿಲ್ಲೆಯ ರೋಗಿಗಳು ಸೂಪರ್ ಸ್ಪೆಷಾಲಿಟಿ ಸೌಲಭ್ಯಕ್ಕಾಗಿ ಮಂಗಳೂರು ಅಥವಾ ಗೋವಾಕ್ಕೆ ಹೋಗಬೇಕಾದ ಪರಿಸ್ಥಿತಿಯಿದೆ. ಹೀಗಾಗಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಲಾಗುತ್ತಿದೆ. ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳು ಪೂರಕವಾಗಿ ಬೇಕಾಗುತ್ತದೆ. ಈಗಾಗಲೇ ಮೈಸೂರು, ಕಲ್ಬುರ್ಗಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಿದ್ದು, ಬೇರೆ ಬೇರೆ ಕಡೆಯೂ ಮಾಡಲಾಗುವುದು ಎಂದು ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಹೇಳಿದರು.

ಈ ವೇಳೆ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಯು.ಟಿ. ಖಾದರ್ ಅವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು. ಸ್ಥಳೀಯ ಶಾಸಕರ ಸಭೆ ನಡೆಸಲು ಸಚಿವರಿಗೆ ಸೂಚಿಸಿದರು. ಇದಕ್ಕೆ ಸಮತಿಸಿದ ಸಚಿವರು, ಉತ್ತರಕನ್ನಡ ಜಿಲ್ಲೆಯ ಶಾಸಕರ ಸಭೆ ನಡೆಸುವುದಾಗಿ ಭರವಸೆ ನೀಡಿದರು.

Related posts