ಗುಂಪು ಹಿಂಸಾಚಾರ ಸಂತ್ರಸ್ತರಿಗೆ ಪರಿಹಾರ: 3 ತಿಂಗಳಲ್ಲಿ ಯೋಜನೆ ರೂಪಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಗುಂಪು ಹಿಂಸಾಚಾರಕ್ಕೆ ಒಳಗಾದ ಸಂತ್ರಸ್ತರು ಅಥವಾ ಅವರ ಹತ್ತಿರದ ಕುಟುಂಬ ಸದಸ್ಯರಿಗೆ ಮಧ್ಯಂತರ ಪರಿಹಾರ ನೀಡಲು ಮೂರು ತಿಂಗಳೊಳಗೆ ಯೋಜನೆ ರೂಪಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ನ್ಯಾಯಮೂರ್ತಿ ವಿಜಯಕುಮಾರ್ ಎ. ಪಾಟೀಲ್ ಅವರಿದ್ದ ಏಕಸದಸ್ಯ ಪೀಠ, ಮಂಗಳೂರು ಗುಂಪು ಹಲ್ಲೆ ಪ್ರಕರಣದ ಆರೋಪಿ­ಗಳಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಹಾಗೂ ಮೃತ ಮೊಹಮ್ಮದ್ ಅಶ್ರಫ್ ಅವರ ಸಹೋದರ ಅಬ್ದುಲ್ ಜಬ್ಬಾರ್ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸುವ ವೇಳೆ ಈ ನಿರ್ದೇಶನ ನೀಡಿದೆ.

ಪ್ರಕರಣದಲ್ಲಿ ಈಗಾಗಲೇ ಆರೋಪಪಟ್ಟಿ ಸಲ್ಲಿಕೆಯಾಗಿರುವುದರಿಂದ ಆರೋಪಿಗಳು ಜೈಲಿನಲ್ಲಿ ಇರಬೇಕಾದ ಅಗತ್ಯವಿಲ್ಲ ಎಂಬ ಕಾರಣಕ್ಕೆ ಮಾತ್ರ ಜಾಮೀನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಈ ಹಂತದಲ್ಲಿ ಆರೋಪಿಗಳನ್ನು ಮತ್ತೆ ಬಂಧಿಸಿದರೆ ವಿಚಾರಣೆ ವಿಳಂಬವಾಗುವ ಸಾಧ್ಯತೆಯೂ ಇದೆ ಎಂದು ಅಭಿಪ್ರಾಯಪಟ್ಟಿದೆ.

ಸುಪ್ರೀಂಕೋರ್ಟ್‌ನ ಗುಂಪು ಹಿಂಸಾಚಾರ ಪ್ರಕರಣಗಳ ಮಾರ್ಗಸೂಚಿಗಳನ್ನು ಉಲ್ಲೇಖಿಸಿದ ಹೈಕೋರ್ಟ್, ಇಂತಹ ಪ್ರಕರಣಗಳನ್ನು ನಿಗದಿತ ಅವಧಿಯಲ್ಲಿ ವಿಚಾರಣೆ ನಡೆಸಬೇಕು ಎಂದು ಸೂಚಿಸಿದೆ. ಗುಂಪು ಹಿಂಸಾಚಾರ ತಡೆಯಲು ಅಥವಾ ನಿಯಂತ್ರಿಸಲು ವಿಫಲರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆಯೂ ನಿರ್ದೇಶಿಸಿದೆ.

ನ್ಯಾಯಾಲಯದ ಆದೇಶದ ಪ್ರತಿಯನ್ನು ಎಲ್ಲ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಗಳಿಗೆ ಕಳುಹಿಸುವಂತೆ ಸೂಚಿಸಲಾಗಿದ್ದು, ಇಂತಹ ಪ್ರಕರಣಗಳ ವಿಚಾರಣೆಯಲ್ಲಿ ಸಂತ್ರಸ್ತರನ್ನು ಪಕ್ಷಕಾರರನ್ನಾಗಿ ಮಾಡಬೇಕು ಎಂದು ತಿಳಿಸಿದೆ.

ಈ ಪ್ರಕರಣವು 2025ರ ಏಪ್ರಿಲ್ 27ರಂದು ಮಂಗಳೂರು ತಾಲೂಕಿನ ಕುಡುಪು ಗ್ರಾಮದ ಭತ್ರ ಕಲ್ಲೂರ್ತಿ ದೇವಸ್ಥಾನದ ಹಿಂಭಾಗದ ಕ್ರಿಕೆಟ್ ಮೈದಾನದಲ್ಲಿ ನಡೆದಿದ್ದ ಎನ್ನಲಾದ ಗುಂಪು ಹಲ್ಲೆಗೆ ಸಂಬಂಧಿಸಿದೆ. ಮೊಹಮ್ಮದ್ ಅಶ್ರಫ್ ಮೃತಪಟ್ಟ ಪ್ರಕರಣದಲ್ಲಿ ಪೊಲೀಸರು 20 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಬಹುತೇಕ ಆರೋಪಿಗಳಿಗೆ ಬಳಿಕ ಜಾಮೀನು ದೊರೆತಿತ್ತು.

Related posts