ಪಿಓಪಿ ಗಣೇಶ ಮೂರ್ತಿಗಳ ವಿರುದ್ಧ ಕಾರ್ಯಾಚರಣೆ; 872 ವಿಗ್ರಹಗಳು ವಶ

ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪರಿಸರಕ್ಕೆ ಹಾನಿಕಾರಕವಾದ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟ ತಡೆಗಟ್ಟಲು ರಾಜ್ಯ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದೆ.

ಪಿಓಪಿ ಗಣೇಶ ಮೂರ್ತಿಗಳ ಗುರುತಿಸುವಿಕೆ, ಮಾರಾಟ ತಡೆ ಹಾಗೂ ವಶಪಡಿಸಿಕೊಳ್ಳುವ ಉದ್ದೇಶದಿಂದ ಬೆಂಗಳೂರು, ರಾಮನಗರ, ಮೈಸೂರು, ಮಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

153 ಮಳಿಗೆ, ಗೋದಾಮುಗಳ ತಪಾಸಣೆ; 872 ಪಿಓಪಿ ಮೂರ್ತಿಗಳು ಜಪ್ತಿ

ಆಗಸ್ಟ್ 18ರಿಂದ ಸೆಪ್ಟೆಂಬರ್ 2ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ ತಂಡಗಳು ಒಟ್ಟು 153 ಮಳಿಗೆಗಳು ಹಾಗೂ ಗೋದಾಮುಗಳನ್ನು ಪರಿವೀಕ್ಷಣೆ ನಡೆಸಿದ್ದು, 872 ಪಿಓಪಿ ಗಣೇಶ ಮೂರ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿವೆ. ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪಿಓಪಿ ಮೂರ್ತಿಗಳನ್ನು ತಯಾರಿಸಲಾಗುತ್ತಿದೆಯೇ, ಮಾರಾಟ ಮಾಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರವು ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆ, ಸಾಗಣೆ, ಮಾರಾಟ ಹಾಗೂ ವಿಸರ್ಜನೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನೇ ಬಳಸುವಂತೆ ಸಚಿವರು ಮನವಿ ಮಾಡಿದ್ದಾರೆ. ಜೈವಿಕವಾಗಿ ಕರಗುವ ಮಣ್ಣಿನ ಮೂರ್ತಿಗಳ ಬಳಕೆಯಿಂದ ಜಲಮಾಲಿನ್ಯ ಹಾಗೂ ತ್ಯಾಜ್ಯ ಪ್ರಮಾಣವನ್ನು ಕಡಿಮೆ ಮಾಡಬಹುದು. ಜಲಚರಗಳ ಸಂರಕ್ಷಣೆಯ ದೃಷ್ಟಿಯಿಂದಲೂ ಪಿಓಪಿ ಮೂರ್ತಿಗಳನ್ನು ಬಳಸದೆ, ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸುವಂತೆ ಅವರು ಕರೆ ನೀಡಿದ್ದಾರೆ.

“ಮಣ್ಣಿನ ಗಣೇಶ ಮೂರ್ತಿಗಳನ್ನೇ ಬಳಸಿ, ಪರಿಸರ ಹಾಗೂ ಜಲಚರಗಳ ಸಂರಕ್ಷಣೆಗೆ ಕೈಜೋಡಿಸಿ” ಎಂದು ಸಚಿವ ರಾಮಲಿಂಗಾ ರೆಡ್ಡಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Related posts