ದೆಹಲಿಯಲ್ಲಿ ಕಾವೇರಿ ಸಂಕಷ್ಟದ ವಾಸ್ತವ ಚಿತ್ರಣ; ಪ್ರಾಧಿಕಾರದ ಮುಂದೆ ರಾಜ್ಯದ ವಾದ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ತೀವ್ರ ನೀರಿನ ಕೊರತೆ ಹಾಗೂ ರೈತರ ಹಿತರಕ್ಷಣೆಯ ಹಿನ್ನೆಲೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮುಂದೆ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಬಲವಾಗಿ ಮಂಡಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ರಾಜ್ಯದಲ್ಲಿ ನೀರಿನ ಲಭ್ಯತೆ ಕಡಿಮೆಯಾಗಿರುವುದನ್ನು ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡಲು ಅಧಿಕಾರಿಗಳ ತಂಡ ಈಗಾಗಲೇ ದೆಹಲಿಗೆ ತೆರಳಿದೆ. ಈ ಸಂಬಂಧ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮಂಗಳವಾರ ಸಭೆ ನಡೆಸಿ, ರಾಜ್ಯದ ಪರವಾಗಿ ಮಂಡಿಸಬೇಕಾದ ಅಂಶಗಳು ಹಾಗೂ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಪದೇಪದೇ ಅರ್ಜಿ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯವೂ ಪ್ರತಿಯೊಂದು ವಿಚಾರಕ್ಕೂ ನ್ಯಾಯಾಲಯದ ಮೆಟ್ಟಿಲೇರುವ ಅಗತ್ಯವಿಲ್ಲ ಎಂಬ ಸಲಹೆ ನೀಡಿದೆ. ರಾಜ್ಯದ ಪಾಲಿನ ನೀರನ್ನು ತಮಿಳುನಾಡು ಕೃಷಿ ಚಟುವಟಿಕೆಗಳಿಗೆ ಅತಿಯಾಗಿ ಬಳಸಿಕೊಂಡಿರುವ ಅಂಶವನ್ನು ರಾಜ್ಯದ ಪರವಾಗಿ ಸಲ್ಲಿಸಲಾಗುವ ಮೇಲ್ಮನವಿಯಲ್ಲಿ ಪ್ರಮುಖವಾಗಿ ಪ್ರಸ್ತಾಪಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Oplus_16908288

“ಸರ್ಕಾರ ಸದಾ ರೈತರ ರಕ್ಷಣೆಗೆ ಬದ್ಧವಾಗಿದೆ. ಹೇಮಾವತಿ ಜಲಾನಯನ ಪ್ರದೇಶದ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಲಾಗಿದ್ದು, ಹಾರಂಗಿ ಹಾಗೂ ಕೆಆರ್‌ಎಸ್ ಜಲಾಶಯಗಳಿಂದಲೂ ಅಗತ್ಯ ನೀರನ್ನು ಹರಿಸಲಾಗಿದೆ” ಎಂದು ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ವಾಸ್ತವ ನೀರಿನ ಲಭ್ಯತೆ, ರೈತರ ಅಗತ್ಯ ಹಾಗೂ ಜಲಾಶಯಗಳ ಸ್ಥಿತಿಗತಿಗಳನ್ನು ಪ್ರಾಧಿಕಾರದ ಗಮನಕ್ಕೆ ತಂದು, ರಾಜ್ಯದ ಹಿತಾಸಕ್ತಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

Related posts