ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್ ಹಾಗೂ ಅವರ ಪತ್ನಿ ನಾಗರತ್ನ ಅವರ ಹಲವು ವರ್ಷಗಳ ವೈವಾಹಿಕ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ದಂಪತಿಗೆ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಹೆಚ್. ಶಾಂತಿಭೂಷಣ್ ಅವರಿದ್ದ ವಿಭಾಗೀಯ ಪೀಠ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ನೀಡಿದೆ. ವಿಚ್ಛೇದನದ ಜತೆಗೆ ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ ನೀಡುವಂತೆ ದುನಿಯಾ ವಿಜಯ್ ಅವರಿಗೆ ನ್ಯಾಯಾಲಯ ಸೂಚಿಸಿದೆ.

ಪತ್ನಿ ಹಾಗೂ ಮೂವರು ಮಕ್ಕಳ ಭವಿಷ್ಯ ಮತ್ತು ಜೀವನ ನಿರ್ವಹಣೆಯನ್ನು ಪರಿಗಣಿಸಿ ಜೀವನಾಂಶದ ಮೊತ್ತ ನಿಗದಿಪಡಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ. ವಿಜಯ್ ಅವರ ಸಾಮಾಜಿಕ ಸ್ಥಾನಮಾನ, ವೃತ್ತಿಪರ ಆದಾಯ ಹಾಗೂ ಆರ್ಥಿಕ ಸ್ಥಿತಿಗತಿಗಳನ್ನೂ ಪರಿಗಣಿಸಲಾಗಿದೆ.

‘ದುನಿಯಾ’ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಜನಪ್ರಿಯತೆ ಗಳಿಸಿದ ವಿಜಯ್ ಅವರ ವೈಯಕ್ತಿಕ ಜೀವನದ ವಿವಾದ ಹಲವು ವರ್ಷಗಳಿಂದ ಸುದ್ದಿಯಲ್ಲಿತ್ತು.

ದುನಿಯಾ ವಿಜಯ್ ಹಾಗೂ ನಾಗರತ್ನ 1999ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಮೂವರು ಮಕ್ಕಳಿದ್ದಾರೆ. 2013ರಲ್ಲಿ ವಿಜಯ್ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಹಲವು ವರ್ಷಗಳ ಕಾಲ ನಡೆದ ಕಾನೂನು ಹೋರಾಟ ಇದೀಗ ಹೈಕೋರ್ಟ್ ತೀರ್ಪಿನೊಂದಿಗೆ ಅಂತ್ಯಗೊಂಡಿದೆ.

Related posts