ಬೆಂಗಳೂರು: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಇನ್ನೂ ಯಾವುದೇ ಅಧಿಕೃತ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದೆ. ಬೆಂಗಳೂರು ದಕ್ಷಿಣ ಮತ್ತು ತುಮಕೂರು ಭಾಗಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ ಕೇಂದ್ರದ ಈ ಹೇಳಿಕೆ ಮಹತ್ವ ಪಡೆದಿದೆ.
ಲೋಕಸಭೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಕೇಳಿದ ಪ್ರಶ್ನೆಗೆ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೊಲ್ ಲಿಖಿತ ಉತ್ತರ ನೀಡಿದರು.
ರಾಜ್ಯ ಸರ್ಕಾರದ ಮನವಿಯಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಬೆಂಗಳೂರಿನ ಸುತ್ತಮುತ್ತ ಗುರುತಿಸಲಾದ ಮೂರು ಪ್ರಸ್ತಾವಿತ ಸ್ಥಳಗಳಲ್ಲಿ ಪೂರ್ವ-ಸಾಧ್ಯತಾ ಅಧ್ಯಯನ ನಡೆಸಿ, ಅದರ ವರದಿಯನ್ನು ಈಗಾಗಲೇ ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದೆ. ಆದರೆ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ನೀತಿಯಡಿ ಅಗತ್ಯವಿರುವ ಅಧಿಕೃತ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಇದುವರೆಗೆ ಕೇಂದ್ರಕ್ಕೆ ಸಲ್ಲಿಸಿಲ್ಲ ಎಂದು ಸಚಿವಾಲಯ ತಿಳಿಸಿದೆ.

ರಾಜ್ಯ ಸರ್ಕಾರದಿಂದ ಅಧಿಕೃತ ಪ್ರಸ್ತಾವನೆ ಸಲ್ಲಿಕೆಯಾದ ನಂತರವೇ ಎರಡನೇ ವಿಮಾನ ನಿಲ್ದಾಣ ಸ್ಥಾಪನೆಗೆ ಸಂಬಂಧಿಸಿದ ಮೌಲ್ಯಮಾಪನ ಹಾಗೂ ಅನುಮೋದನಾ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಈ ಕುರಿತು ಸಂಸದ ಪಿ.ಸಿ. ಮೋಹನ್ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕೇಂದ್ರದ ಲಿಖಿತ ಉತ್ತರವನ್ನು ಹಂಚಿಕೊಂಡಿದ್ದು, “ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕಾಗಿ ಎಎಐ ಮೂರು ಸ್ಥಳಗಳ ಪೂರ್ವ-ಸಾಧ್ಯತಾ ಅಧ್ಯಯನ ಪೂರ್ಣಗೊಳಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆದರೆ ಆ ಬಳಿಕ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಯಾವುದೇ ಪ್ರಸ್ತಾವನೆ ಬಂದಿಲ್ಲ” ಎಂದು ತಿಳಿಸಿದ್ದಾರೆ.
The Airports Authority of India (AAI) has completed pre-feasibility studies for three sites for Bengaluru’s second airport and submitted the report to the Government of Karnataka. The Union Government has not received any proposal thereafter from the State Government. pic.twitter.com/QmSyOmaxrl
— P C Mohan (@PCMohanMP) July 27, 2026

