ಬಿಜೆಪಿ ರಾಷ್ಟ್ರೀಯ ಘಟಕ ಪುನಾರಚನೆ: ಕರ್ನಾಟಕದ ಇಬ್ಬರಿಗೆ ಸ್ಥಾನ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಘಟಕವನ್ನು ಪುನಾರಚನೆ ಮಾಡಲಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ ಅಧಿಕಾರ ವಹಿಸಿಕೊಂಡ ಸುಮಾರು ಆರು ತಿಂಗಳ ಬಳಿಕ ಮಹತ್ವದ ಬದಲಾವಣೆ ಮಾಡಲಾಗಿದೆ. ಹೊಸ ತಂಡದಲ್ಲಿ ಅನುಭವ ಮತ್ತು ಯುವ ನಾಯಕತ್ವಕ್ಕೆ ಆದ್ಯತೆ ನೀಡಲಾಗಿದ್ದು, ಮಹಿಳೆಯರಿಗೂ ಪ್ರಾತಿನಿಧ್ಯ ಕಲ್ಪಿಸಲಾಗಿದೆ.

ಹೊಸ ತಂಡದಲ್ಲಿ 13 ರಾಷ್ಟ್ರೀಯ ಉಪಾಧ್ಯಕ್ಷರು, 8 ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ 16 ಮೋರ್ಚಾ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಬಿ.ಎಲ್. ಸಂತೋಷ್ ಅವರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಶಿವಪ್ರಕಾಶ್ ಮತ್ತು ಸೌದನ್ ಸಿಂಗ್ ಅವರನ್ನು ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ವಿನೋದ್ ತಾವ್ಡೆ, ಸುನಿಲ್ ಬನ್ಸಾಲ್, ಬಿಪ್ಲಬ್ ಕುಮಾರ್ ದೇವ್, ಸ್ಮೃತಿ ಇರಾನಿ, ಸತೀಶ್ ಪೂನಿಯಾ, ಗಜೇಂದ್ರ ಪಟೇಲ್, ಹರೀಶ್ ದ್ವಿವೇದಿ ಹಾಗೂ ಸಂಜಯ್ ಭಾಟಿಯಾ ನೇಮಕಗೊಂಡಿದ್ದಾರೆ.

ವಸುಂಧರಾ ರಾಜೇ ಸಿಂಧಿಯಾ, ತೀರತ್ ಸಿಂಗ್ ರಾವತ್, ರಾಮ್ ಮಾಧವ್, ವೈಜಯಂತ್ ಜಯ್ ಪಾಂಡಾ, ಡಿ. ಪುರಂದೇಶ್ವರಿ ಸೇರಿದಂತೆ 13 ಮಂದಿಯನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಪಿಯೂಷ್ ಗೋಯಲ್ ರಾಷ್ಟ್ರೀಯ ಕೋಶಾಧಿಕಾರಿಯಾಗಿ ಮುಂದುವರಿದಿದ್ದಾರೆ.

ಇದೇ ವೇಳೆ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಲ್ಲಿ ಬದಲಾವಣೆ ಮಾಡಲಾಗಿದೆ. ಸಂಸದ ತೇಜಸ್ವಿ ಸೂರ್ಯ ಅವರನ್ನು ಈ ಹುದ್ದೆಯಿಂದ ಬದಲಾಯಿಸಿ ಗುಜರಾತ್ ಮೂಲದ ಡಾ. ಹೇಮಾಂಗ್ ಜೋಶಿ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಪಕ್ಷದ ಸಾಮಾಜಿಕ ಜಾಲತಾಣ ಮತ್ತು ಐಟಿ ಸೆಲ್ ಮುಖ್ಯಸ್ಥರಾಗಿದ್ದ ಅಮಿತ್ ಮಾಳವೀಯ ಅವರ ಹೆಸರು ಹೊಸ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಅವರ ಸ್ಥಾನಕ್ಕೆ ದೀಪಕ್ ಮಹಾಸ್ಕರೆ ಅವರನ್ನು ಸಾಮಾಜಿಕ ಜಾಲತಾಣ ಸಂಚಾಲಕರಾಗಿ ನೇಮಿಸಲಾಗಿದೆ.

Related posts