ಲೋಕಸಭಾ ಚುನಾವಣೆಯಲ್ಲಿ ಬೊಮ್ಮಾಯಿ ಸ್ಪರ್ಧಿಸ್ತಾರ? ಮಾಜಿ ಸಿಎಂ ಹೇಳಿದ್ದು ಹೀಗೆ

ಹಾವೇರಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಲವಾರು ಸಂಸದರಿಗೆ ಬಿಜೆಪಿ ಟಿಕೆಟ್ ಸಿಗಲ್ಲ ಎಂಬ ಮಾತುಗಳು ಹರಿದಾಡುತ್ತಿವೆ. ಇದೇ ವೇಳೆ, ಹಾವೇರಿ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆಯೂ ಚರ್ಚೆ ಸಾಗಿವೆ. ಇದೇ ವೇಳೆ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.‌

ತಾವು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗುತ್ತೇನೆ ಅನ್ನುವುದು ಮಾದ್ಯಮದ ಸೃಷ್ಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಹಾವೇರಿ ಜಿಲ್ಲಾ ಕೋರ್ ಕಮಿಟಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಹಾವೇರಿ ಗದಗ ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ಬಗ್ಗೆ ಚರ್ಚೆ ನಡೆಯಿತು ಸಭೆಯಲ್ಲಿ ಕೆಲವು ನಿರ್ಣಯ ಕೈಗೊಂಡಿದ್ದೆವೆ. ಪಕ್ಷದ ಅಧ್ಯಕ್ಷರು ಪದಾದಿಕಾರಿಗಳು ಸೇರಿ ತಂಡ ಮಾಡಿ ಕೋರ್ ಸಮಿತಿ ಮಾಡಬೇಕು ಎಂಬ ನಿರ್ಣಯ ಆಗಿತ್ತು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ ಅಭ್ಯರ್ಥಿಗಳ ಜೊತೆ ಚರ್ಚೆ ಮಾಡಿದ್ದೇನೆ ಎಂದರು.

ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ದ ಜನಾಂದೋಲನ ರೂಪಿಸುವ ಬಗ್ಗೆ ಚರ್ಚೆ ಆಯಿತು. ಸಭೆಯಲ್ಲಿ ಕೆಲವು ತೀರ್ಮಾನ ಮಾಡಿದ್ದೇವೆ. ಬೂತ್ ಮಟ್ಟದಿಂದ ಮತ್ತೆ ಸಂಘಟನೆ ಮಾಡುವುದು. ಯುವಕರಿಗೆ, ಮಹಿಳೆಯರಿಗೆ, ಒಬಿಸಿಯವರಿಗೆ ಹೆಚ್ಚಿನ ಪ್ರಧಾನ್ಯತೆ ಕೊಡುವುದು. ಹಾವೇರಿ ಜಿಲ್ಲಾ ಕೇಂದ್ರದಲ್ಲಿ ಹೋರಾಟ ಮಾಡುವ ಬಗ್ಗೆ ಚರ್ಚೆ ಆಯಿತು ಎಂದರು.

ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತೇನೆ ಅಂತ ನಾನು ಎಲ್ಲಾದರೂ ಹೇಳಿದಿನಾ ಎಂದು ಪ್ರಶ್ನಿಸಿದರು. ಹಾವೇರಿ ಕ್ಷೇತ್ರದ ಈಶ್ವರಪ್ಪ ಪುತ್ರ ಕಾಂತೇಶ್ ಸ್ಪರ್ಧೆ ಮಾಡುತ್ತಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.

ಜೆಡಿಎಸ್- ಬಿಜೆಪಿ ಮೈತ್ರಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ದೆಹಲಿಯಲ್ಲಿ ಏನು ನಡೆದಿದೆ ಎನ್ನುವ ಸ್ಪಷ್ಟ ಮಾಹಿತಿ ಇಲ್ಲ. ಈ ಅನಿಷ್ಟ ಸರ್ಕಾರದ ವಿರುದ್ಧ ಜಂಟಿ ಹೋರಾಟ ಮಾಡುವ ಭಾವನೆ ಎಲ್ಲರಿಗೂ ಇದೆ. ಅಮಿತ್ ಶಾ- ದೇವೆಗೌಡರ ಭೇಟಿ ಸ್ವಾಗತಾರ್ಹ. ಜೆಡಿಎಸ್ ನವರೂ ಸ್ಪಷ್ಟವಾಗಿ ಏನೂ ಹೇಳುತ್ತಿಲ್ಲ. ಕೆಲವೇ ವಾರಗಳಲ್ಲಿ ಯಾರಿಗೆ ಎಷ್ಟು ಕ್ಷೇತ್ರ ಎನ್ನುವ ಅಂಕಿ ಸಂಖ್ಯೆ ಸ್ಪಷ್ಟ ಆಗಲಿದೆ ಎಂದರು.

ವಿಪಕ್ಷ ನಾಯಕನ ಆಯ್ಕೆ ವಿಳಂಬ ಆಗುತ್ತಿರುವ ಬಗ್ಗೆ ಯಾರಿಗೂ ಗೊತ್ತಿಲ್ಲ. ರಾಜ್ಯಾದ್ಯಕ್ಷ ಹಾಗೂ ವಿಪಕ್ಷ ನಾಯಕ ಎರಡೂ ಒಟ್ಟಿಗೆ ಮಾಡಲು ಸಮಯ ಹಿಡಿದಿರಬಹುದು ಅಂತ ನನ್ನ ವಯಕ್ತಿಕ ಅಭಿಪ್ರಾಯ ಎಂದರು.

Related posts