ಸೆಪ್ಟೆಂಬರ್‌ನಲ್ಲಿ ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಲೋಕಾರ್ಪಣೆ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ನಾಗರಿಕರ ಬಹುದಿನಗಳ ಕನಸಾದ ವೈದ್ಯಕೀಯ ಕಾಲೇಜು ಮುಂದಿನ ತಿಂಗಳು ಲೋಕಾರ್ಪಣೆಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಸಚಿವರು ಈ ಮಾಹಿತಿ ನೀಡಿದರು.

433.94 ಕೋಟಿ ರೂ. ವೆಚ್ಚದಲ್ಲಿ ಈ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವ ಮಂಜೂರಾತಿ ನೀಡಿ ಕಾಮಗಾರಿ ಆರಂಭಿಸಲಾಗಿತ್ತು. ಅದೀಗ ಶೇಕಡ 95ರಷ್ಟು ಪೂರ್ಣಗೊಂಡಿದ್ದು, ಉಳಿದ ಸಣ್ಣಪುಟ ಕೆಲಸಗಳು ಮುಂದಿನ ಕೆಲವೇ ದಿನಗಳಲ್ಲಿ ಮುಗಿಯಲಿದೆ ಎಂದರು.

ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ಈ ವೈದ್ಯಕೀಯ ಕಾಲೇಜಿನ ಲೋಕಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈಗಾಗಲೇ ನೀಡಿರುವ ಉತ್ತರದಲ್ಲಿ ಸ್ಪಷ್ಟಪಡಿಸಿದ್ದೇನೆ ಎಂದು ಸಚಿವರು ತಿಳಿಸಿದರು.

ಈಗಾಗಲೇ ಸ್ಥಳೀಯ ಶಾಸಕರೊಂದಿಗೆ ಎರಡು ಮೂರು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಬಾಕಿ ಉಳಿದಿರುವ ಕೆಲಸ ಪೂರ್ಣಗೊಳಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ ಎಂದು ಡಾ. ಪಾಟೀಲ್‌ ಹೇಳಿದರು.

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ 174 ಕೋಟಿ ರೂ.

ಈಗಾಗಲೇ ಈ ಕಾಲೇಜಿಗೆ ಸ್ಥಳಾಂತರವಾಗಿದೆ. ಬಹುತೇಕ ಸೌಲಭ್ಯವನ್ನು ಒದಗಿಸಿದ್ದೇವೆ. ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ಆರಂಭಿಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು. 174 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕಾರ್ಯವೂ ನಡೆಯುತ್ತಿದೆ. ಇದಕ್ಕಾಗಿ ಹಣವನ್ನೂ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಫೆಬ್ರವರಿಯೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ಇದನ್ನು ಕೂಡ ಎರಡು ಬಾರಿ ಖುದ್ದಾಗಿ ಪರಿಶೀಲಿಸಿ, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನವನ್ನು ನೀಡಿದ್ದೇನೆ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ಹೇಳಿದರು.

ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಮಾರ್ಚ್‌ ತಿಂಗಳ ಅಂತ್ಯದೊಳಗೆ ಇದು ಪೂರ್ಣಗೊಳ್ಳಲಿದೆ ಎಂದು ವಿವರಿಸಿದರು.

ಮುಂದಿನ ದಿನಗಳಲ್ಲಿ ನರ್ಸಿಂಗ್‌ ಕಾಲೇಜು

ನರ್ಸಿಂಗ್‌ ಕಾಲೇಜು ಆರಂಭಿಸಬೇಕೆಂದು ಶಾಸಕರು ಮನವಿ ಸಲ್ಲಿಸಿದ್ದರು. ಅದನ್ನು ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವು ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

Related posts