ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಗಣತಿ: ಕೇಂದ್ರದ ನಿರ್ಧಾರಕ್ಕೆ ‘ರಾಹುಲ್ ಸ್ಫೂರ್ತಿ’ ಎಂದ ಕೈ ನಾಯಕರು

ಬೆಂಗಳೂರು: ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯ ತೀರ್ಮಾನ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಬಿಜೆಪಿ, ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ ‘X’ನಲ್ಲಿ ಬರೆದುಕೊಂಡಿದ್ದಾರೆ.

ಇದೇ ವೇಳೆ, ರಾಜಕೀಯ ವಿಶ್ಲೇಷಕರೂ ಆದ ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರ ಪ್ರತಿಕ್ರಿಯೆ ಗಮನಸೆಳೆದಿದೆ. ಕೇಂದ್ರದ ನಿರ್ಧಾರಕ್ಕೆ ಸ್ಫೂರ್ತಿಯಾದವರು ರಾಹುಲ್ ಗಾಂಧಿ ಎಂದು ಬಣ್ಣಿಸಿದ್ದಾರೆ.
ಕೇಂದ್ರದ ತೀರ್ಮಾನದ ಬಗ್ಗೆ ಸಾಮಾಜಿಕ ಮಾಧ್ಯಮ ‘X’ನಲ್ಲಿ ಪ್ರತಿಕ್ರಿಯೆಯನ್ನು ಪೋಸ್ಟ್ ಮಾಡಿರುವ ಮಾಜಿ ಶಾಸಕರೂ ಆದ ರಮೇಶ್ ಬಾಬು, ‘ಜಾತಿ ಜನಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವು ಸಾಮಾಜಿಕ ನ್ಯಾಯದತ್ತ ಒಂದು ಮಹತ್ವದ ಹೆಜ್ಜೆಯಾಗಿದೆ. ಈ ವಿಷಯವನ್ನು ಮುನ್ನೆಲೆಗೆ ತರುವಲ್ಲಿ ರಾಹುಲ್ ಗಾಂಧಿಯವರ ಸ್ಥಿರವಾದ ವಕಾಲತ್ತು ಮತ್ತು ಸಮಾನತೆಗೆ ಬದ್ಧತೆಯು ನಿರ್ಣಾಯಕ ಪಾತ್ರ ವಹಿಸಿದೆ’ ಎಂದು ಬಣ್ಣಿಸಿದ್ದಾರೆ.

Related posts