ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಪರೀಕ್ಷಾ ಅಕ್ರಮ ತಡೆಯಲಾಗದ ಸರ್ಕಾರ ಪರೀಕ್ಷಾರ್ಥಿಗಳ ತಾಳಿ, ಸರ, ಆಭರಣಗಳನ್ನೂ ತೆಗೆಸುತ್ತಿತ್ತು. ಇದೀಗ ಜನಿವಾರಕ್ಕೆ ಕೈ ಹಾಕಿದೆ ಎಂಬ ಆಕ್ರೋಶ ವ್ಯಕತವಾಗಿದೆ. ಸಿಸಿ ಕ್ಯಾಮೆರಾ ಅಡಿಯಲ್ಲಿ ಪರೀಕ್ಷೆ ಬರೆಯುವಾಗ ಜನಿವಾರ, ತಾಳಿ ಮೂಲಕ ಅಕ್ರಮ ನಡೆಯಲು ಸಾಧ್ಯವಿಲ್ಲ. ಆದರೂ ಹಿಂದೂ ಸಂಸ್ಕೃತಿ ಮೇಲೆ ಸವಾರಿ ಮಾಡುವ ಉದ್ದೇಶದಿಂದಲೇ ಈ ರೀತಿಯ ಕ್ರಮ ನಡೆಯುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ.
ಈ ನಡುವೆ ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಪ್ರಕರಣ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.