ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ IPL ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದು ಇದಕ್ಕೆ ಸರ್ಕಾರವೇ ಹೊಣೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಅಷ್ಟೇ ಅಲ್ಲ, ದುರಂತ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಲ್ಲ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲೂ ವ್ಯಕ್ತವಾಗಿದೆ.
ಈ ನಡುವೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಗುರುವಾರ FIR ದಾಖಲಾಗಿದೆ. ಆರ್ಸಿಬಿ, ಈವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್ ಸಿಎ) ಮತ್ತು ಇತರರ ವಿರುದ್ಧ FIR ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೊಂದೆಡೆ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.