KSRTC ಸಿಬ್ಬಂದಿಗೆ ಬರೋಬ್ಬರಿ 1 ಕೋ.ರೂ. ವಿಮಾ ಯೋಜನೆ ಜಾರಿ: ಮಹತ್ವದ ಒಪ್ಪಂದ

ಬೆಂಗಳೂರು: ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ KSRTC ಸಿಬ್ಬಂದಿಗೆ ರೂ.1 ಕೋಟಿ ರೂಪಾಯಿ ಮೊತ್ತದ ಅಪಘಾತ ವಿಮಾ ಯೋಜನೆ ಸೌಲಭ್ಯ ಜಾರಿ ಮಾಡಿದೆ.  ಈಗಾಗಲೇ ರೂ 50 ಲಕ್ಷ ವಿಮೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾರವರಿಂದ ಹಾಗೂ ಇಂದು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ರವರಿಂದ ಮಾಡಿಕೊಂಡ ಒಡಂಬಡಿಕೆಯ ರೂ.50 ಲಕ್ಷ ಸೇರಿ, ಒಟ್ಟು ರೂ.1 ಕೋಟಿ ಅಪಘಾತ ವಿಮೆ ಯೋಜನೆ ಇದಾಗಿದೆ.

ನಿಗಮವು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ  ಜೊತೆ ಇಂದು ಮಹತ್ವದ ಒಡಂಬಡಿಕೆ ಮಾಡಿಕೊಂಡಿದ್ದು , ಅದರಂತೆ ಸಿಬ್ಬಂದಿಗಳಿಗೆ ರೂ.50 ಲಕ್ಷದವರೆಗೆ ಅಪಘಾತ ಪರಿಹಾರ ವಿಮಾ ಯೋಜನೆಯನ್ನು ಈಗಾಗಲೇ ಜಾರಿಗೆ ತರಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ನಿಗಮದ ಕೇಂದ್ರ ಕಚೇರಿಯಲ್ಲಿ ಮಾನ್ಯ ಶಾಸಕರು ಹಾಗೂ ಅಧ್ಯಕ್ಷರಾದ ಶ್ರೀ. ಎಂ. ಚಂದ್ರಪ್ಪರವರ ಸಮ್ಮುಖದಲ್ಲಿ ಶ್ರೀ.ವಿ.ಅನ್ಬುಕುಮಾರ್, ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ಕೆ ಎಸ್ ಆರ್ ಟಿ ಸಿ ಹಾಗೂ ಶ್ರೀ.ಅಂಗ್ರೂಪ್ ಸೋನಂ, ಪ್ರಧಾನ ವ್ಯವಸ್ಥಾಪಕರು, ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ರವರು ಒಡಂಬಡಿಕೆಗೆ ಸಹಿ ಹಾಕಿದರು.

ಕಾರ್ಯಕ್ರಮದಲ್ಲಿ ಡಾ. ನವೀನ್ ಭಟ್ ವೈ, ಭಾಆಸೇ, ನಿರ್ದೇಶಕರು (ಸಿಬ್ಬಂದಿ & ಜಾಗೃತ) ಜಂಟಿ ಕ್ರಿಯಾ ಸಮಿತಿಯ ಕಾರ್ಮಿಕ ಮುಖಂಡರುಗಳಾದ ಶ್ರೀ.ಅನಂತ ಸುಬ್ಬರಾವ್ ಮತ್ತು ಇತರೆ ಕಾರ್ಮಿಕ ಸಂಘಗಳ ಮುಖಂಡರುಗಳು , ಶ್ರೀಮತಿ ಉಷಾ ಚಂದ್ರಮೌಳಿ, ಪ್ರಾದೇಶಿಕ ವ್ಯವಸ್ಥಾಪಕರು, ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿ. ಬೆಂಗಳೂರು ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ  ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ನಿಗಮದ ಅಧ್ಯಕ್ಷರಾದ ಎಂ. ಚಂದ್ರಪ್ಪ ನವರು ನಿಗಮವು ಜಾರಿಗೊಳಿಸುತ್ತಿರುವ ಈ ವಿಮಾ ಯೋಜನೆಯು ಕಾರ್ಮಿಕ ಮತ್ತು ಅವರ ಕುಟುಂಬದವರ ಹಿತದೃಷ್ಟಿಯಿಂದ ಜಾರಿಗೊಳಿಸುತ್ತಿರುವ ಅತ್ಯುತ್ತಮವಾದ ಯೋಜನೆಯಾಗಿದ್ದು, ಅಪಘಾತ (On duty ಮತ್ತು Off duty ಒಳಗೊಂಡಂತೆ ನೀಡಲಾಗುವ) ವಿಮಾ ಯೋಜನೆಯಾಗಿರುವುದು ಸಿಬ್ಬಂದಿಗಳಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದರು.

ಈ ಯೋಜನೆಯ ಹೈಲೈಟ್ಸ್ ಹೀಗಿದೆ: 

◾ ಕೆಎಸ್ಸಾರ್ಟಿಸಿ ಸಿಬ್ಬಂದಿಗಳು ಅಪಘಾತದಲ್ಲಿ (ಕರ್ತವ್ಯದ ಮೇಲೆ ಅಥವಾ ಕರ್ತವ್ಯದಲ್ಲಿ ಇಲ್ಲದಿರುವಾಗಲೂ) ಮೃತಪಟ್ಟರೆ ಅಥವಾ ಶಾಶ್ವತ / ತಾತ್ಕಾಲಿಕ ಅಂಗವೈಕಲ್ಯಕ್ಕೆ ತುತ್ತಾದರೆ ಅವರಿಗೆ ರೂ. 50 ಲಕ್ಷಗಳ ಪರಿಹಾರ ನೀಡುವ ಪ್ರೀಮಿಯಂ ರಹಿತ ಅಪಘಾತ ಪರಿಹಾರ ವಿಮಾ ಯೋಜನೆಯನ್ನು ನಿಗಮವು ಭಾರತೀಯ ಸ್ಟೇಟ್ ಬ್ಯಾಂಕ್ ಜೊತೆಯಲ್ಲಿ ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಜಾರಿಗೆ ತರಲಾಗಿದೆ.

◾ ಈ ವಿಮಾ ಯೋಜನೆಗೆ ಸಿಬ್ಬಂದಿಗಳು ಮಾಹೆಯಾನ ರೂ.62.50 + ಜಿ.ಎಸ್.ಟಿ ಸೇರಿದಂತೆ (ವಾರ್ಷಿಕ ರೂ.885/- ಪ್ರೀಮಿಯಂ) ಪಾವತಿಸಬೇಕಾಗುತ್ತದೆ.

◾ ಈ ಯೋಜನೆಯಲ್ಲಿ ಸಿಬ್ಬಂದಿ ಪ್ರತಿ ತಿಂಗಳು ರೂ.62.50 ಹಾಗೂ ಜಿಎಸ್‌ಟಿ ಸೇರಿ ಪ್ರೀಮಿಯಂ (ವಾರ್ಷಿಕ ರೂ.750 ಹಾಗೂ ಜಿಎಸ್‌ಟಿ ಸೇರಿದಂತೆ ಒಟ್ಟು ರೂ.885) ಪಾವತಿಸಬೇಕಾಗುತ್ತದೆ.

◾ ಈ ವೈಯಕ್ತಿಕ ವಿಮಾ ಯೋಜನೆಯಿಂದ ಪಾಲಿಸಿದಾರರು ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ರೂ. 50 ಲಕ್ಷಗಳ ಪರಿಹಾರದ ಹಣ ಕೂಡಲೇ ದೊರೆಯಲಿದೆ.

◾ ಅಪಘಾತದಲ್ಲಿ ಸಿಬ್ಬಂದಿಗಳು ಶಾಶ್ವತವಾಗಿ ಪೂರ್ಣ ಅಂಗ ವೈಕಲ್ಯಕ್ಕೆ ತುತ್ತಾದಲ್ಲಿ ಸಹ ರೂ. 50 ಲಕ್ಷಗಳ ವಿಮಾ ಪರಿಹಾರ ದೊರೆಯಲಿದೆ.

◾ ಈ ವಿಮಾ ಯೋಜನೆಯಲ್ಲಿ ಮತ್ತೊಂದು ಉಪಯಕ್ತ ಕ್ರಮವೆಂದರೆ ಕರ್ತವ್ಯ ನಿರತ ಹಾಗೂ ಕರ್ತವ್ಯದಲ್ಲಿ ಇಲ್ಲದ (On duty and Off duty) ಸಮಯದಲ್ಲೂ ಆಗುವ ವೈಯಕ್ತಿಕ ಅಪಘಾತಗಳಿಗೂ ವಿಮೆ ಅನ್ವಯಿಸುತ್ತದೆ.

◾ ಒಂದು ವೇಳೆ ಸಿಬ್ಬಂದಿಯು ಅಪಘಾತಕ್ಕೆ ಒಳಗಾಗಿ ತಾತ್ಕಾಲಿಕ ಅಂಗವೈಕಲ್ಯ ಉಂಟಾಗಿ, ತನ್ನ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಅಸಮರ್ಥನಾದ ಪಕ್ಷದಲ್ಲಿ, ಆತನು ಚೇತರಿಸಿಕೊಳ್ಳುವವರೆಗೆ, ಅವನಿಗೆ ವಿಮಾ ಮಾಡಲಾದ ರೂ.50 ಲಕ್ಷ ಮೊತ್ತದ ಶೇಕಡಾ ಒಂದರಷ್ಟು ಮೊತ್ತವನ್ನು ಪ್ರತಿವಾರ ರೂ.5000 ಕ್ಕೆ ಹೆಚ್ಚದಂತೆ ಅಥವಾ ಅವರ ಮಾಸಿಕ ಸಂಬಳದ ಶೇಕಡಾ 25ರಷ್ಟನ್ನು,ಯಾವುದು ಕಡಿಮೆಯೋ ಅದನ್ನು ಸಿಬ್ಬಂದಿಗೆ ವಿಮಾ ಸಂಸ್ಥೆಯು ನೀಡುವುದು.

◾ ಈ ಎರಡು ವಿಮಾ ಯೋಜನೆಗಳಿಂದ ನಿಗಮವು ತನ್ನ ಸಿಬ್ಬಂದಿಗಳಿಗೆ ರೂ.1 ಕೋಟಿ ಮೊತ್ತದ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೆ ತಂದಂತಾಗಿದೆ. ಇಲ್ಲಿಯವರೆಗೂ ನಿಗಮದ ಸಿಬ್ಬಂದಿಗಳಿಗೆ ಯಾವುದೇ ಅಪಘಾತ ವಿಮಾ ಯೋಜನೆಯ ಸೌಲಭ್ಯವಿರಲಿಲ್ಲ.

Related posts