ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ನಂತರ ಕಾಂಗ್ರೆಸ್ ಪಕ್ಷ ಸೇರುವವರ ಸಂಖ್ಯೆ ಬೆಳೆಯುತ್ತಲೇ ಇದೆ ಎಂದಿರುವ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಬಿಜೆಪಿ ತೊರೆದು ಹಲವರು ಕಾಂಗ್ರೆಸ್ ಸೇರುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಸೇರುವವರ ದೊಡ್ಡ ಪಟ್ಟಿ ಇದೆ. ಅದನ್ನು ಈಗ ಬಹಿರಂಗಪಡಿಸುವುದಿಲ್ಲ ಎಂದಿದ್ದಾರೆ.

ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ, ಶ್ರೀನಿವಾಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಇಂದು ಪೂರ್ಣಿಮಾ ಶ್ರೀನಿವಾಸ್ ಅವರ ಜೊತೆ ಕಾರ್ಪೊರೇಟರ್ ನರಸಿಂಹ ನಾಯಕ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಸೇರುವವರ ದೊಡ್ಡ ಪಟ್ಟಿ ಇದೆ. ಅದನ್ನು ಈಗ ಬಹಿರಂಗಪಡಿಸುವುದಿಲ್ಲ. ಒಬ್ಬೊಬ್ಬರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳುವ ಕೆಲಸ ಮಾಡುತ್ತೇವೆ. ಈ ಪ್ರಕ್ರಿಯೆ ಇಲ್ಲಿಗೆ ನಿಲ್ಲಬಾರದು. ಪ್ರತಿ ಬೂತ್ ಹಾಗೂ ಹಳ್ಳಿಗಳಲ್ಲಿ ಇದೇ ರೀತಿ ಕಾರ್ಯಕ್ರಮಗಳನ್ನು ಮಾಡಿ ಅಲ್ಲಿನ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದರು.

ಖರ್ಗೆ ಅವರ ನಾಯಕತ್ವದಲ್ಲಿ ಕರ್ನಾಟಕ ಹಾಗೂ ಹಿಮಾಚಲ ಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ರಾಹುಲ್ ಗಾಂಧಿ ಅವರು ದೇಶದುದ್ದಗಲ ಭಾರತ ಜೋಡೋ ಯಾತ್ರೆ ಮಾಡಿ ದೇಶದ ಮನಸ್ಸುಗಳನ್ನು ಒಂದುಗೂಡಿಸಿದ್ದಾರೆ. ಈಗ ದೇಶದಲ್ಲಿ ಇಂಡಿಯಾ ಒಕ್ಕೂಟ ರೂಪುಗೊಂಡಿದ್ದು, ಇದಕ್ಕೆ ಎಲ್ಲರೂ ಸೇರಿ ಶಕ್ತಿ ತುಂಬಬೇಕು ಎಂದವರು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಹಳಬರು ಹೊಸಬರು ಎಂಬ ಬೇಧವಿಲ್ಲದೆ ಶ್ರಮಿಸಬೇಕು. ರಾಜಕೀಯದಲ್ಲಿ ಭಿನ್ನಾಭಿಪ್ರಾಯ ಸಹಜ. ಆದರೆ ಪಕ್ಷದ ಸಿದ್ಧಾಂತಕ್ಕಾಗಿ ಎಲ್ಲಾ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮಾರ್ಗದರ್ಶನ ಮಾಡಿದ ಡಿಕೆಶಿ, ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ನಡೆದಾಗ ಕನಕಪುರಕ್ಕಿಂತಲೂ ಹಿರಿಯೂರು ಕ್ಷೇತ್ರದಲ್ಲಿ ಹೆಚ್ಚಿನ ಸದಸ್ಯತ್ವ ಮಾಡಲಾಗಿತ್ತು. ಅದಕ್ಕೆ ತಕ್ಕಂತೆ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಮತ ಬಂದಿದ್ದವು. ಈಗ ನಿಮ್ಮ ಸೇರ್ಪಡೆಯಿಂದ ನಮ್ಮ ಶಕ್ತಿ ಮತ್ತಷ್ಟು ಹೆಚ್ಚಾಗಿದೆ. ಇದು ನಿಮ್ಮ ಮನೆ ಇದನ್ನು ಬಲಪಡಿಸುವ ಜವಾಬ್ದಾರಿ ನಿಮ್ಮದು. ಈ ಕಾರ್ಯಕ್ರಮದ ಮೂಲಕ ಬೆಂಗಳೂರು ಮಾತ್ರವಲ್ಲ ಇಡೀ ರಾಜ್ಯಕ್ಕೆ ಒಂದು ಸಂದೇಶ ರವಾನಿಸಲಾಗುತ್ತಿದೆ ಎಂದರು.

Related posts