ಡಿಕೆ ಬ್ರದರ್ಸ್‌’ಗೆ ಸವಾಲಾದ ಹೆಚ್ಡಿಕೆ; ನಾಳೆ ಅಥವಾ ನಾಡಿದ್ದು ನೈಸ್‌ ಅಕ್ರಮಗಳ ದಾಖಲೆ ಬಹಿರಂಗ

ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್‌ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ? ನೈಸ್‌ ಮಾಡಿರುವ ಲೂಟಿಯಲ್ಲಿ ಡಿಕೆ ಸಹೋದರರ ಪಾಲು ಎಷ್ಟಿದೆ? ಹೆಚ್ಡಿಕೆ ಪ್ರಶ್ನೆ

ರಾಮನಗರ: ನೈಸ್‌ ಅಕ್ರಮಗಳು, ಬೆಂಗಳೂರು ಸುತ್ತಮುತ್ತ ರೈತರ ಭೂಮಿ ಕೊಳ್ಳೆ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಡಿಕೆ ಸಹೋದರರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, 2004ರಲ್ಲಿ ಡಿ.ಕೆ.ಶಿವಕುಮಾರ್‌ ಅವರು ನಗರಾಭಿವೃದ್ಧಿ ಮಂತ್ರಿ ಆಗಿದ್ದಿದ್ದು ರಾಮನಗರ ಜಿಲ್ಲೆಯ ಉದ್ಧಾರಕ್ಕೋ ಅಥವಾ ನೈಸ್‌ ಕಂಪನಿಯನ್ನು ಉದ್ಧಾರ ಮಾಡಿ ರೈತರ ಭೂಮಿ ಲೂಟಿ ಹೊಡೆಯಲಿಕ್ಕೋ? ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್‌ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ? ಎಂದು ಪ್ರಶ್ನಿಸಿದ್ದಾರೆ.

ರಾಮನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಡಿಕೆ ಸಹೋದರರ ವಿರುದ್ಧ ಅವರು ತೀವ್ರ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ನಾಳೆ ಅಥವಾ ನಾಡಿದ್ದು ನೈಸ್‌ ಅಕ್ರಮಗಳು, ಡಿಕೆ ಸಹೋದರು ಕೊಳ್ಳೆ ಹೊಡೆದಿರುವ ನೈಸ್‌ ಭೂಮಿಯ ದಾಖಲೆಗಳನ್ನು ಬಹಿರಂಗ ಮಾಡುತ್ತೇನೆ ಎಂದು ಘೋಷಣೆ ಮಾಡಿದರು.

ಕುಮಾರಸ್ವಾಮಿ ನೈಸ್‌ ವ್ಯವಹಾರ ಮಾಡಿದ್ದಾರೆ ಎಂದ ಸಂಸದ ಡಿಕೆ ಸುರೇಶ್‌ ವಿರುದ್ಧ ಕಿಡಿಕಾರಿದ ಮಾಜಿ ಮುಖ್ಯಮಂತ್ರಿಗಳು; ನೈಸ್‌ ಭೂಮಿ ಸೇರಿ ಬೆಂಗಳೂರಿನ ಸುತ್ತಾ ರೈತರ ಭೂಮಿ ಲೂಟಿ ಮಾಡಿಕೊಂಡು ಬದುಕುತ್ತಿದ್ದಾನೆ. ೨೦೧೩ರಲ್ಲಿ ಎಂಪಿ ಆಗುವುದಕ್ಕೆ ಮುಂಚೆ ಇವನ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ? ಎಂಪಿ ಆಗಿ ಎಂಟು ವರ್ಷದಲ್ಲಿ ಇವನು ಆಸ್ತಿ ಎಷ್ಟಾಗಿದೆ? ಇದೆಲ್ಲಾ ಗೊತ್ತಿಲ್ಲದ ವಿಷಯವಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇವೇಗೌಡರೇ ಸಹಿ ಹಾಕಿದ್ದು

ನೈಸ್‌ ಯೋಜನೆಗೆ ದೇವೇಗೌಡರೇ ಒಪ್ಪಂದ ಮಾಡಿಕೊಂಡಿದ್ದು. ಇಲ್ಲ ಎಂದು ನಾನೆಲ್ಲಿ ಹೇಳಿದೆ, ಅವರು ರಸ್ತೆ ಆಗಲಿ ಎಂದು ಒಪ್ಪಂದ ಮಾಡಿಕೊಂಡರು. ಬೆಂಗಳೂರು-ಮೈಸೂರು ಜನಕ್ಕೆ ಅನುಕೂಲವಾಗಲಿ ಎಂದು ಅವರು ಈ ಯೋಜನೆಗೆ ಅವರು ಒಪ್ಪಿಗೆ ನೀಡಿದರು. 1995 ಅಥವಾ 1986ನೇ ಇಸವಿ ಇರಬೇಕು, ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿ ಆಗಿದ್ದರು. ಈ ಜಿಲ್ಲೆಯ ಮಾಯಗಾನಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿ 15-20 ಶಾಲಾ ಮಕ್ಕಳು ತೀರಿಕೊಂಡರು. ಆವತ್ತೇ ಬೆಂಗಳೂರು-ಮೈಸೂರು ನಡುವೆ ನಾಲ್ಕು ಪಥದ ಹೆದ್ದಾರಿ ಮಾಡಬೇಕು ಎಂದು ದೇವಗೌಡರು ತೀರ್ಮಾನ ಮಾಡಿದರು. ಹಣ ಇಲ್ಲ ಎನ್ನುವ ಕಾರಣಕ್ಕೆ ಹೆಗಡೆ ಅವರ ಕಾಲದಲ್ಲಿ ಆ ಯೋಜನೆ ಆಗಲಿಲ್ಲ. ಕೊನೆಗೆ ದೇವೇಗೌಡರು ಮುಖ್ಯಮಂತ್ರಿ ಆದ ಮೇಲೆ ಈ ಯೋಜನೆಗೆ ಚಾಲನೆ ನೀಡಿದರು ಎಂದರು ಅವರು ಮಾಹಿತಿ ನೀಡಿದರು.

ನೈಸ್‌ ಲೂಟಿಯಲ್ಲಿ ಡಿಕೆ ಸಹೋದರರ ಪಾಲು ಎಷ್ಟಿದೆ?

ದೇವೇಗೌಡರು ಮಾಡಿಕೊಂಡ ಒಪ್ಪಂದದಂತೆ ರಸ್ತೆ ಆಗಿದ್ದಿದ್ದರೆ ಏಷ್ಯಾಖಂಡದಲ್ಲಿಯೇ ಬೆಂಗಳೂರು ಮೈಸೂರು ನಗರಗಳು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಆಗುತ್ತಿದ್ದವು. ವಾಣಿಜ್ಯ ಚಟುವಟಿಕೆಗಳು ಹೆಚ್ಚಿ ಜನರಿಗೆ ಜೀವನೋಪಾಯ ಸಿಗುತ್ತಿತ್ತು. ಆದರೆ, ಈ ಲೂಟಿಕೋರರು ಮಾಡಿದ್ದೇನು? ಬೆಂಗಳೂರು ಸುತ್ತಾಮುತ್ತ ರೈತರ ಭೂಮಿಯನ್ನು ಕೊಳ್ಳೆ ಹೊಡೆದರು. ನೈಸ್‌ ಕಂಪನಿ ಮಾಡಿರುವ ಲೂಟಿಯಲ್ಲಿ ಡಿಕೆ ಸಹೋದರರ ಪಾಲು ಎಷ್ಟಿದೆ? ಈ ಬಗ್ಗೆ ದಾಖಲೆಗಳನ್ನೇ ಹೊರಗಿಡುತ್ತೇನೆ. 2004ರಲ್ಲಿ ಇವರ ಅಣ್ಣ (ಡಿಕೆ ಸುರೇಶ್‌ ಅಣ್ಣ ಡಿ.ಕೆ.ಶಿವಕುಮಾರ್‌) ರಾಮನಗರ ಜಿಲ್ಲೆ ಉದ್ಧಾರ ಮಾಡುವುದಕ್ಕೆ ಮಂತ್ರಿ ಆಗಿದ್ದರೋ ಅಥವಾ ನೈಸ್‌ ಕಂಪನಿಯನ್ನು ಉದ್ಧಾರ ಮಾಡಿ ದುಡ್ಡು ಹೊಡೆಯೋದಕ್ಕೆ ಮಂತ್ರಿ ಆಗಿದ್ದರೋ? ಎಲ್ಲ ದಾಖಲೆಗಳನ್ನು ನಾಳೆ ನಾಡಿದ್ದರಲ್ಲಿಯೇ ಬಿಡುಗಡೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಪ್ರಕಟಿಸಿದರು.

2013ರಿಂದ 2018ರವರೆಗೆ ಡಿ.ಕೆ.ಶಿವಕುಮಾರ್‌ ಮಂತ್ರಿ ಆಗಿದ್ದರಲ್ಲಾ? ಆವಾಗ ಇವರು ರಾಮನಗರಕ್ಕೆ ನೀರನ್ನು ಯಾಕೆ ಕೊಡಲಿಲ್ಲ. ಅವಾಗ ಏನ್‌ ಮಾಡ್ತಾ ಇದ್ದರು? ಬಂಡೆ ಹೊಡೆದಕೊಂಡು ಕೂತಿದ್ದರಾ? ಎಂದು ಹೆಚ್ಡಿಕೆ ಪ್ರಶ್ನಿಸಿದರು.

ಕುಮಾರಸ್ವಾಮಿ ಮಾಡಿರುವ ಎಲ್ಲಾ ಕೆಲಸಗಳಿಗೆ ಸಾಕ್ಷ್ಯ ಗುಡ್ಡೆಗಳಿವೆ, ಅವೆಲ್ಲಾ ಕಣ್ಣಿಗೆ ಕಾಣುತ್ತಿವೆ, ಇವರು ಬೆಟ್ಟಗುಡ್ಡಗಳನ್ನು ಹೊಡೆದು ಚೀನಾಗೆ ಸಾಗಿದ್ದರ ಬಗ್ಗೆ ಕರಗಿರುವ ಬೆಟ್ಟಗುಡ್ಡಗಳ ಸಾಕ್ಷಿಗುಡ್ಡೆಗಳಿವೆ. ಅವು ಎಲ್ಲರ ಕಣ್ಣಿಗೂ ಕಾಣುತ್ತಿವೆ. ಈ ಜಿಲ್ಲೆಯ ಅಭಿವೃದ್ಧಿಗೆ ಭದ್ರ ಅಡಿಪಾಯ ಹಾಕಿದ್ದು ದೇವೇಗೌಡರು, ನೀರಿನ ಯೋಜನೆ ತಂದಿದ್ದು ನಾನು. ಇತರರ ಬಗ್ಗೆ ಲಘವಾಗಿ ಮಾತನಾಡುವುದನ್ನು ನಿಲ್ಲಿಸಿ, ಕ್ರಿಯೆ ಇಟ್ಟುಕೊಳ್ಳಿ, ಇನ್ನೊಬ್ಬರು ಮಾಡಿರುವ ಕೆಲಸದ ಬಗ್ಗೆ ಹೇಳುವ ಹೃದಯವೈಶಾಲ್ಯತೆ ಬೆಳೆಸಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ತಿರುಗೇಟು ನೀಡಿದರು.

ಮೆಡಿಕಲ್‌ ಕಾಲೇಜ್‌ ಕನಕಪುರಕ್ಕೆ ಯಾಕೆ?

ರಾಮನಗರ ಜಿಲ್ಲೆ ಜನರಿಗೆ ನನ್ನಿಂದ ಕಿಂಚಿತ್ತೂ ಅನ್ಯಾಯ ಆಗಿಲ್ಲ. ಜಿಲ್ಲೆಯ ಜನರನ್ನು ನಾನು ತಂದೆ ತಾಯಿ ಸ್ಥಾನದಲ್ಲಿಟ್ಟು ನೋಡುವವನು. ಸ್ವಷ್ಟವಾಗಿ ಹೇಳಬಯಸುತ್ತೇನೆ. ಕಳೆದ ಚುನಾವಣೆ ಫಲಿತಾಂಶದ ಬಗ್ಗೆ ನಾನು ಜನರಿಗೆ ದೋಷ ಕೊಡಲ್ಲ. ನಾನು ಈ ಜಿಲ್ಲೆಗೆ ಕೊಟ್ಟಿರುವ ಕೊಡುಗೆ ಏನು ಎಂಬುದು ಆ ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಮನಗರಕ್ಕೆ ರಾಜೀವಗಾಂಧಿ ವೈದ್ಯಕೀಯ ವಿಶ್ವಾವಿದ್ಯಾಲಯ ಕೊಟ್ಟವನು ನಾನು. ಆಮೇಲೆ ಪ್ರತ್ಯೇಕವಾಗಿ ಇವರ ಹಿಂಸೆ ತಾಳಲಾರದೆ 100 ಕೋಟಿ ಮೀಸಲಿಟ್ಟು ಕನಕಪುರಕ್ಕೆ ಒಂದು ಮೆಡಿಕಲ್‌ ಕಾಲೇಜ್‌ ಮಂಜೂರು ಮಾಡಿದೆ. ಆಮೇಲೆ ಬಂದ ಬಿಜೆಪಿ ಸರ್ಕಾರದವರು ಅದನ್ನು ಚಿಕ್ಕಬಳ್ಳಾಪುರಕ್ಕೆ ತೆಗೆದುಕೊಂಡು ಹೋದರು. ಈಗ ರಾಮನಗರದಲ್ಲಿ ಮಾಡಬೇಕಾದ ಮೆಡಿಕಲ್‌ ಕಾಲೇಜನ್ನು ಕನಕಪುರಕ್ಕೆ ತೆಗೆದುಕೊಂಡು ಹೋಗ್ತಾ ಇದ್ದಾರೆ, ಎಲ್ಲೋ ಮೂಲೆಗೆ. ಇದು ಇವರು ರಾಮನಗರಕ್ಕೆ ಕೊಡುತ್ತಿರುವ ಬಳುವಳಿ. ಜನರು ಅರ್ಥ ಮಾಡಿಕೊಳ್ಳಬೇಕು. ಜಿಲ್ಲಾ ಕೇಂದ್ರ ಅಭಿವೃದ್ಧಿ ಆಗೋದು ಅವರಿಗೆ ಇಷ್ಟವಿಲ್ಲ ಎಂದರು ಅವರು.

Related posts