ಡಿಕೆಶಿ ಜೊತೆ ಯಾವುದೇ ರಾಜಕೀಯ, ವ್ಯಾವಹಾರಿಕ ಸಂಬಂಧ ಇಲ್ಲ: ವಿಜಯೇಂದ್ರ ಸ್ಪಷ್ಟನೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತಮಗೆ ಯಾವುದೇ ರಾಜಕೀಯ ಅಥವಾ ವ್ಯಾವಹಾರಿಕ ಸಂಬಂಧ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಪಕ್ಷದ ಹಿರಿಯ ನಾಯಕರ ಸಲಹೆಯಂತೆ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡುವ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ತಿಳಿಸಿದ್ದಾರೆ.

ಧರ್ಮಸ್ಥಳಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರು ವಿವಿಧ ಕೈಂಕರ್ಯಗಳಲ್ಲಿ ಭಾಗವಹಿಸಿದರು. ಈ ವೇಳೆ ಅವರೊಂದಿಗೆ ಒಬ್ಬ ಸಂಸದ, ಎಂಟು ಶಾಸಕರು ಹಾಗೂ ಇಬ್ಬರು ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

ಬಳಿಕ ಧರ್ಮಸ್ಥಳ ಕ್ಷೇತ್ರದ ವಸತಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ನಡೆಯುತ್ತಿರುವ ಅಪಪ್ರಚಾರಗಳಿಗೆ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪೂರ್ಣವಿರಾಮ ಇಟ್ಟಿರುವುದಾಗಿ ಹೇಳಿದರು.

“ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ವಿಚಾರ ನನಗೆ ಮಾತ್ರವಲ್ಲ, ಲಕ್ಷಾಂತರ ಬಿಜೆಪಿ ಕಾರ್ಯಕರ್ತರಿಗೂ ತೀವ್ರ ನೋವು ಮತ್ತು ಆಘಾತ ಉಂಟುಮಾಡಿದೆ. ನಾನು ಭಾವನಾತ್ಮಕ ವ್ಯಕ್ತಿಯಾಗಿರುವ ಕಾರಣ ಸತ್ಯಾಸತ್ಯತೆ ಹೊರಬರಲಿ ಎಂಬ ಉದ್ದೇಶದಿಂದ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡುವ ಬಗ್ಗೆ ಹೇಳಿದ್ದೆ. ಆದರೆ ಪಕ್ಷದ ಹಿರಿಯರು ಈ ವಿಚಾರವನ್ನು ಪಕ್ಷದೊಳಗೇ ಬಗೆಹರಿಸಿಕೊಳ್ಳೋಣ ಎಂದು ಸಲಹೆ ನೀಡಿದ್ದರಿಂದ ಆ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ. ಇದೀಗ ಕೇವಲ ದೇವರ ದರ್ಶನಕ್ಕಾಗಿ ಬಂದಿದ್ದೇನೆ” ಎಂದು ಹೇಳಿದರು.

ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ರಾಜಕೀಯ ಮತ್ತು ವ್ಯಾವಹಾರಿಕ ಸಂಬಂಧವಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಅಲ್ಲದೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ವಿಜಯೇಂದ್ರ ಸಹಕಾರ ನೀಡಿದ್ದಾರೆ ಎಂಬ ಟೀಕೆಗಳೂ ವ್ಯಕ್ತವಾಗಿದ್ದವು.

ಈ ಆರೋಪಗಳನ್ನು ತಳ್ಳಿಹಾಕಿದ ವಿಜಯೇಂದ್ರ, “ನನಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಯಾವುದೇ ರಾಜಕೀಯ ಅಥವಾ ವ್ಯಾವಹಾರಿಕ ಸಂಬಂಧವಿಲ್ಲ. ಸಿಎಂ ಪರವಾಗಿ ನಾನು ಅಡ್ಡ ಮತದಾನಕ್ಕೆ ಸಹಕಾರ ನೀಡಿದ್ದೇನೆ ಎಂಬ ಆರೋಪಗಳು ಸಂಪೂರ್ಣ ಸುಳ್ಳು. ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ನಿಂತು ಹೇಳುತ್ತಿದ್ದೇನೆ, ಇವೆಲ್ಲವೂ ನಿರಾಧಾರ ಆರೋಪಗಳು” ಎಂದು ಸ್ಪಷ್ಟಪಡಿಸಿದರು.

ನಾಡಿನ ಸುಪ್ರಸಿದ್ಧ ಪುಣ್ಯಕ್ಷೇತ್ರ, ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಇಂದು ಶ್ರೀ ಮಂಜುನಾಥ ಸ್ವಾಮಿ ಹಾಗೂ ಪರಿವಾರ ದೇವರುಗಳ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ಬರಗಾಲದ ಕರಿಛಾಯೆ ಆವರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ನಾಡಿನಲ್ಲಿ ಉತ್ತಮ ಮಳೆಯಾಗಲಿ, ಬೆಳೆ ಬೆಳೆದು… pic.twitter.com/hIFbapTrZq

— Vijayendra Yediyurappa (@BYVijayendra) June 26, 2026

“ಕೆಪಿಸಿಸಿ ಅಧ್ಯಕ್ಷರಾಗಿದ್ದವರಿಗೆ ಹಾಗೂ ಮುಖ್ಯಮಂತ್ರಿಯ ಹುದ್ದೆಗೆ ನೀಡಬೇಕಾದ ಗೌರವವನ್ನು ಮಾತ್ರ ನಾನು ನೀಡುತ್ತಿದ್ದೇನೆ. ನನ್ನ ವಿರುದ್ಧ ಅಪಪ್ರಚಾರ ನಡೆಸಿದವರಿಗೂ ದೇವರು ಒಳ್ಳೆಯದು ಮಾಡಲಿ” ಎಂದು ಅವರು ಮಾರ್ಮಿಕವಾಗಿ ನುಡಿದರು.

Related posts