ಅಪಘಾತದಲ್ಲಿ ಗಾಯಗೊಂಡ KSRTC ಸಿಬ್ಬಂದಿಗೆ 25 ಲಕ್ಷ, ಮೃತರ ಬಂಧುಗಳಿಗೆ ತಲಾ ರೂ.1 ಕೋಟಿ ಪರಿಹಾರ ವಿತರಿಸಿದ ಸಾರಿಗೆ ಸಚಿವ

ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದುಕೊಂಡ KSRTC ಸಿಬ್ಬಂದಿಗೆ ಪ್ರಪ್ರಥಮ ಬಾರಿಗೆ ರೂ.25 ಲಕ್ಷ ಪರಿಹಾರ ವಿತರಣೆ ಮಾಡಲಾಗಿದೆ. ಮೃತಪಟ್ಟ ಸಿಬ್ಬಂದಿ ಕುಟುಂಬಗಳಿಗೆ ತಲಾ ರೂ.1 ಕೋಟಿ ಪರಿಹಾರ ವಿತರಿಸಲಾಗಿದೆ. ಇದೇ ವೇಳೆ, ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ (31 ಸಿಬ್ಬಂದಿಯ ಅವಲಂಬಿತರಿಗೆ ತಲಾ ರೂ.10 ಲಕ್ಷ ರೂ) ರೂ.3.10 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕರಾರಸಾ ನಿಗಮ ದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ವರು ವಿವಿಧ ಪರಿಹಾರ ಯೋಜನೆ ಅಡಿ ಸಿಬ್ಬಂದಿ ಹಾಗೂ ಅವಲಂಭಿತರಿಗೆ ಪರಿಹಾರ ಮೊತ್ತದ ಚೆಕ್’ಗಳನ್ನು ವಿತರಿಸಿದರು. ಅಪಘಾತದಿಂದ ಮೃತಪಟ್ಟ ಸಿಬ್ಬಂದಿಗಳ ಅವಲಂಬಿತರಿಗೆ ಸಾಂತ್ವಾನ ಹೇಳಿದ ಸಚಿವ ರಾಮಲಿಂಗ ರೆಡ್ಡಿ, ಸಿಬ್ಬಂದಿಯ ಜೀವ ಅಮೂಲ್ಯವಾದದ್ದು, ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ, ಆದರೆ ಅವರ ಅವಲಂಬಿತರ ಮುಂದಿನ ಜೀವನವು ಆರ್ಥಿಕವಾಗಿ ಭದ್ರತೆಯಿಂದ ಕೂಡಿರಲಿ ಎಂಬ ಸದ್ದುದೇಶದಿಂದ ಸಾರಿಗೆ ಸುರಕ್ಷಾ ಯೋಜನೆಯನ್ನು ಜಾರಿಗೊಳಿಸಿರುವುದಾಗಿ ತಿಳಿಸಿದರು. ಸಾರಿಗೆ ಸಿಬ್ಬಂದಿ ಹಗಲಿರುಳು ತಮ್ಮ ಸಂಸ್ಥೆಗಾಗಿ ಶ್ರಮಿಸಿರುವುದರಿಂದ ಸಾರಿಗೆ ಸಂಸ್ಥೆಯು ಇಂದು ಉನ್ನತ ಸ್ಥಾನದಲ್ಲಿದೆ. ಹಾಗಾಗಿ ಮೃತ ಸಿಬ್ಬಂದಿಯ ಕುಟುಂಬವನ್ನು ನೋಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಮೃತರ ಅವಲಂಬಿತರಿಗೆ ಈಗಾಗಲೇ ನಾಲ್ಕು ನಿಗಮಗಳಲ್ಲಿ ಅನುಕಂಪದ ಆಧಾರದ ಮೇಲೆ 1000 ನೌಕರಿ ನೀಡಿರುವುದಾಗಿ ಸಚಿವರು ತಿಳಿಸಿದರು.

ವಿತರಿಸಲಾದ ಪರಿಹಾರದ ಮೊತ್ತವನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು‌, ಮಕ್ಕಳ ವಿದ್ಯಾಬ್ಯಾಸ, ಮನೆ ನಿರ್ಮಾಣ ಮತ್ತು ಇತರೆ ಶುಭ ಕಾರ್ಯಗಳಿಗೆ ಸದುಪಯೋಗ ಪಡಿಸಿಕೊಳ್ಳುವಂತೆ ಸಚಿವರು ಸಲಹೆ ನೀಡಿದರು. ಬಡ್ಡಿ ವ್ಯಾಮೋಹಕ್ಕೆ ಒಳಗಾಗಿ ಪರಿಹಾರ ಧನವನ್ನು ಯಾರಿಗೂ ನೀಡದಂತೆ ಕಿವಿ ಮಾತು ಹೇಳಿದ ಅವರು, ಹಣವಿದ್ದರೆ ಎಲ್ಲರು ನೆಂಟರೆ ಆದರೆ ಸೂಕ್ತವಾದ ರೀತಿಯಲ್ಲಿ ಹಣ ಬಳಕೆ ಮಾಡಿಕೊಳ್ಳಲು ತಿಳಿಸಿದರು.

ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ದೃಷ್ಠಿಯಿಂದ “KSRTC ಆರೋಗ್ಯ” ಯೋಜನೆಯನ್ನು ಕೂಡ ಜಾರಿಗೆ ತಂದಿದ್ದು, ರಾಜ್ಯಾದಾದ್ಯಂತ 300 ಕ್ಕೂ ಅಧಿಕ ಆಸ್ಪತ್ರೆಗಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿದ್ದು, ಈವರೆಗೂ 56,000 ಕ್ಕೂ ಹೆಚ್ಚು ಸಿಬ್ಬಂದಿ/ಅವಲಂಬಿತರು ಚಿಕಿತ್ಸೆ ಪಡೆದಿರುವುದಾಗಿ ತಿಳಿಸಿದರು.

ಇದೇ ಪ್ರಪ್ರಥಮ ಬಾರಿಗೆ ನಿಗಮದ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಪಘಾತಕ್ಕೆ ಒಳಪಟ್ಟು, ಬಲಗಾಲಿನ ಮಂಡಿಯ ಕೆಳಗೆ ಕಾಲನ್ನು ಕಳೆದುಕೊಂಡ ಹಾಸನ ವಿಭಾಗದ ಚಾಲಕ-ಕಂ-ನಿರ್ವಾಹಕ ಸುನಿಲ್ ಕುಮಾರ್ ಬಿ.ಡಿ. ಅವರಿಗೆ ಪರಿಹಾರವಾಗಿ ರೂ.25.00 ಲಕ್ಷಗ ವಿತರಿಸಲಾಯಿತು. ಇದಲ್ಲದೆ ಅವರಿಗೆ ದಿನಾಂಕ: 25-03-24 ರಿಂದ 09-12-24 ರವರೆಗೆ 08 ತಿಂಗಳು 14 ದಿನಗಳ ಅವಧಿಗೆ ಐ.ಓ.ಡಿ ನೀಡಲಾಗಿದೆ. ಸಂಸ್ಥೆಯ ವತಿಯಿಂದ ಪೂರ್ಣ ವೈದ್ಯಕೀಯ ವೆಚ್ಚ 4,85,762 ರೂ.ಗಳನ್ನು ಭರಿಸಲಾಗಿದೆ ಹಾಗೂ ಸದರಿ ನೌಕರರಿಗೆ ಲಘು ಹುದ್ದೆ ನೀಡಿ ತಾಂತ್ರಿಕ ಸಹಾಯಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಲಾಗಿದೆ.

ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ ರೂ.1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ಇದುವರೆಗೂ 24 ಜನ ನೌಕರರ ಕುಟುಂಬದವರಿಗೆ ತಲಾ ರೂ. 1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ. ಕರ್ತವ್ಯದಲ್ಲಿರುವಾಗ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಇಬ್ಬರು ಸಿಬ್ಬಂದಿಗಳ ಅವಲಂಬಿತರಿಗೆ ಇಂದು ತಲಾ ರೂ. 1 ಕೋಟಿ ಚೆಕ್ ನೀಡಲಾಗಿದೆ. ಈವರೆಗೂ 26 ಸಿಬ್ಬಂದಿಗಳ ಅವಲಂಭಿತರಿಗೆ ಒಟ್ಟಾರೆ ರೂ.26 ಕೋಟಿ ಪರಿಹಾರ ನೀಡಲಾಗಿದೆ.

ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ:
ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ಪರಿಹಾರ ಮೊತ್ತವಾದ ರೂ. 3 ಲಕ್ಷಗಳನ್ನು 01.11.2023 ರಿಂದ ರೂ.10 ಲಕ್ಷಗಳಿಗೆ ಹೆಚ್ಚಿಸಲಾಗಿದೆ. ಇದುವರೆಗೂ 94 ಪ್ರಕರಣಗಳಲ್ಲಿ ತಲಾ ರೂ.10 ಲಕ್ಷಗಳ ಪರಿಹಾರ ಧನವನ್ನು ನೀಡಿದ್ದು, ನಂತರದಲ್ಲಿ ಕಾಯಿಲೆಗಳಿಂದ ಮರಣ ಹೊಂದಿದ 31 ಸಿಬ್ಬಂದಿಗಳ ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ತಲಾ 10 ಲಕ್ಷ ರೂ.ಗಳ ಪರಿಹಾರದ ಚೆಕ್ಅನ್ನು ಇಂದು ವಿತರಿಸಲಾಯಿತು. ಈವರೆಗೂ 125 ಸಿಬ್ಬಂದಿಗಳ ಅವಲಂಭಿತರಿಗೆ ಒಟ್ಟು ರೂ. 12.50 ಕೋಟಿಗಳ ಪರಿಹಾರ ನೀಡಲಾಗಿದೆ
.
ಕರಾರಸಾ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮಾತನಾಡಿ, ಸಾರಿಗೆ ಸಚಿವರು ಹೇಳಿರುವ ಕಿವಿ ಮಾತನ್ನು ಚಾಚೂ ತಪ್ಪದೆ ಪಾಲಿಸುವಂತೆ ತಿಳಿಸಿದರು. ಹಣವನ್ನು ಸದುಪಯೋಗಪಡಿಸ ಕೊಳ್ಳಿ. ಯಾರನ್ನೂ ನಂಬಿ ದುಡ್ಡನ್ನು ಕಳೆದುಕೊಳ್ಳಬೇಡಿ. ಸಂಸ್ಥೆ ಸದಾ ತಮ್ಮೊಡನೆ ಇದೆ ಎಂದು ತಿಳಿಸಿದರು.

ಬೆಂ.ಮ.ಸಾ. ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್, ನಿರ್ದೇಶಕರು (ಸಿ ಮತ್ತು ಜಾ) ಡಾ. ನಂದಿನಿದೇವಿ ಸೇರಿದಂತೆ ಅನೇಕ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿರಿದ್ದರು.

Related posts