ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ₹5 ಲಕ್ಷ ಪರಿಹಾರ ವಿತರಣೆ

ಮಂಡ್ಯ: ಮಂಡ್ಯ ತಾಲ್ಲೂಕಿನ ಬಿ.ಹಟ್ನ ಗ್ರಾಮಕ್ಕೆ ಭೇಟಿ ನೀಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ರೈತನ ಕುಟುಂಬದವರೊಂದಿಗೆ ಮಾತುಕತೆ ನಡೆಸಿದ ಸಚಿವರು, ಕುಟುಂಬದ ಆರ್ಥಿಕ ಪರಿಸ್ಥಿತಿ ಹಾಗೂ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣಗಳ ಕುರಿತು ಮಾಹಿತಿ ಪಡೆದರು. ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಕುಟುಂಬದ ನೆರವಿಗೆ ನಿಲ್ಲಲಿದೆ ಎಂದು ಧೈರ್ಯ ತುಂಬಿದರು.

ಸರ್ಕಾರದ ನಿಯಮಾನುಸಾರ ರೈತ ಕುಟುಂಬಕ್ಕೆ ದೊರೆಯಬೇಕಾದ ₹5 ಲಕ್ಷ ಪರಿಹಾರವನ್ನು ಮೃತ ರೈತನ ಪುತ್ರ ಸ್ವಾಮಿ ಅವರಿಗೆ ಸಚಿವರು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ತೀವ್ರ ನಿರ್ಧಾರ ಕೈಗೊಳ್ಳಬಾರದು ಎಂದು ಮನವಿ ಮಾಡಿದರು. ಸಂಕಷ್ಟ ಎದುರಾದಾಗ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ನೆರವು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಬದ್ಧವಾಗಿದ್ದು, ಅರ್ಹ ಕುಟುಂಬಗಳಿಗೆ ನಿಯಮಾನುಸಾರ ನೆರವು ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related posts