ನವದೆಹಲಿ: 2021ರ ಜನವರಿ 1ರಿಂದ 2026ರ ಜೂನ್ 30ರವರೆಗೆ ದೇಶದ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಳಚರಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್ಗಳನ್ನು ಅಪಾಯಕಾರಿ ರೀತಿಯಲ್ಲಿ ಸ್ವಚ್ಛಗೊಳಿಸುವ ವೇಳೆ 332 ನೈರ್ಮಲ್ಯ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಲಿಖಿತ ಉತ್ತರದಲ್ಲಿ, ‘ಕೈಯಿಂದ ಶೌಚಗುಂಡಿ ಸ್ವಚ್ಛಗೊಳಿಸುವ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯ್ದೆ–2013’ ಜಾರಿಗೆ ಸರ್ಕಾರ ಬದ್ಧವಾಗಿದ್ದು, ಕೈಯಿಂದ ಶುಚಿಗೊಳಿಸುವ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಯಾಂತ್ರೀಕೃತ ಸ್ವಚ್ಛತಾ ವ್ಯವಸ್ಥೆ ಮತ್ತು ಪುನರ್ವಸತಿ ಕ್ರಮಗಳಿಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಕಾಯ್ದೆಯಡಿ ಕೈಯಿಂದ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್ಗಳನ್ನು ಸ್ವಚ್ಛಗೊಳಿಸುವುದು ಹಾಗೂ ಅದಕ್ಕೆ ವ್ಯಕ್ತಿಗಳು ಅಥವಾ ಸಂಸ್ಥೆಗಳನ್ನು ನೇಮಿಸುವುದು ಕಾನೂನುಬಾಹಿರವಾಗಿದೆ. ನಿಯಮ ಉಲ್ಲಂಘಿಸಿದರೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ, ₹1 ಲಕ್ಷದವರೆಗೆ ದಂಡ ಅಥವಾ ಎರಡನ್ನೂ ವಿಧಿಸುವ ಅವಕಾಶವಿದೆ ಎಂದು ಸಚಿವರು ಹೇಳಿದ್ದಾರೆ.

ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ (NCSK) ಮಾಹಿತಿಯಂತೆ, ಕಳೆದ ಐದು ವರ್ಷಗಳಲ್ಲಿ ಅಪಾಯಕಾರಿ ಸ್ವಚ್ಛತಾ ಕಾರ್ಯಗಳಿಗೆ ಸಂಬಂಧಿಸಿದಂತೆ 193 ಪ್ರಥಮ ಮಾಹಿತಿ ವರದಿಗಳು (FIR) ದಾಖಲಿಸಲಾಗಿವೆ.
ಸರ್ಕಾರವು ಪ್ರತ್ಯೇಕವಾಗಿ ಯಾಂತ್ರೀಕೃತ ಒಳಚರಂಡಿ ಸ್ವಚ್ಛತಾ ವ್ಯವಸ್ಥೆಯ ಅನುಷ್ಠಾನದ ಮೌಲ್ಯಮಾಪನ ನಡೆಸಿಲ್ಲ. ಆದರೆ, ಇತ್ತೀಚಿನ ಜಿಲ್ಲಾ ಮಟ್ಟದ ಸಮೀಕ್ಷೆಗಳಲ್ಲಿ ಕೈಯಿಂದ ಶೌಚಗುಂಡಿ ಸ್ವಚ್ಛಗೊಳಿಸುವ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಕಾರ್ಮಿಕರ ಸುರಕ್ಷತೆ, ನೈರ್ಮಲ್ಯ ಸೇವೆಗಳ ಯಾಂತ್ರೀಕರಣ ಹಾಗೂ ಪೀಡಿತ ಕಾರ್ಮಿಕರ ಪುನರ್ವಸತಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ‘ಕೈಯಿಂದ ಶೌಚಗುಂಡಿ ಸ್ವಚ್ಛಗೊಳಿಸುವಿಕೆ ಮುಕ್ತ ಭಾರತ’ ನಿರ್ಮಿಸುವ ಗುರಿಯೊಂದಿಗೆ ಸರ್ಕಾರ ಮುಂದುವರಿಯಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

