ಚಾಮರಾಜನಗರ ಶೂಟೌಟ್ ಪ್ರಕರಣ ಸಿಐಡಿಗೆ ಹಸ್ತಾಂತರ; 4 ಎಫ್‌ಐಆರ್‌ಗಳ ತನಿಖೆ

ಚಾಮರಾಜನಗರ: ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸ್ ಇಲಾಖೆ ಸಿಐಡಿಗೆ (CID) ಹಸ್ತಾಂತರಿಸಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿ-ಐಜಿಪಿ) ಸಲೀಂ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ರಾಮಾಪುರ, ಹನೂರು ಹಾಗೂ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಒಟ್ಟು ನಾಲ್ಕು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿದ್ದವು. ರಾಮಾಪುರ ಠಾಣೆಯಲ್ಲಿ ಒಂದು, ಹನೂರು ಠಾಣೆಯಲ್ಲಿ ಎರಡು ಹಾಗೂ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.

ಈ ಎಲ್ಲ ಪ್ರಕರಣಗಳ ತನಿಖೆಯನ್ನು ಸಮಗ್ರವಾಗಿ ನಡೆಸುವ ಉದ್ದೇಶದಿಂದ ಪ್ರಕರಣಗಳನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ನಾಲ್ಕೂ ಪ್ರಕರಣಗಳಿಗೆ ಸಂಬಂಧಿಸಿದ ಸಂಪೂರ್ಣ ಕಡತಗಳು, ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ತಕ್ಷಣ ಸಿಐಡಿ ಅಧಿಕಾರಿಗಳಿಗೆ ಹಸ್ತಾಂತರಿಸುವಂತೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಡಿಜಿ-ಐಜಿಪಿ ಸೂಚಿಸಿದ್ದಾರೆ.

ಮೂವರ ಸಾವಿಗೆ ಕಾರಣವಾದ ಗುಂಡಿನ ದಾಳಿ ಕುರಿತು ಸ್ಥಳೀಯವಾಗಿ ಹಾಗೂ ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನಗಳು ಮತ್ತು ಆಕ್ರೋಶ ವ್ಯಕ್ತವಾಗಿದ್ದವು. ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಲು ಕಾರಣವೇನು, ಘಟನೆ ವೇಳೆ ನಿಖರವಾಗಿ ಏನಾಯಿತು ಎಂಬುದರ ಕುರಿತು ತನಿಖೆ ನಡೆಯಬೇಕಿದೆ.

ಪ್ರಕರಣ ಸಿಐಡಿಗೆ ಹಸ್ತಾಂತರವಾಗಿರುವ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ತಂಡ ಶೀಘ್ರದಲ್ಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಸಾಧ್ಯತೆಯಿದೆ. ಘಟನೆಯ ಸ್ಥಳ, ಸಾಕ್ಷ್ಯಾಧಾರಗಳು ಹಾಗೂ ಸಂಬಂಧಪಟ್ಟವರ ಹೇಳಿಕೆಗಳನ್ನು ಮರುಪರಿಶೀಲಿಸಿ ಗುಂಡಿನ ದಾಳಿಯ ನೈಜ ಕಾರಣ ಮತ್ತು ಘಟನಾವಳಿಗಳ ಸಂಪೂರ್ಣ ಚಿತ್ರಣವನ್ನು ಪತ್ತೆಹಚ್ಚಲು ಸಿಐಡಿ ತನಿಖೆ ನಡೆಸಲಿದೆ.

Related posts