ಜೂನ್ 1ರಂದು ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಯೋಜನೆಗೆ ಜೂನ್ 1ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ, ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ 800 ಕೆಪಿಎಸ್ ಶಾಲೆಗಳನ್ನು ಸಂಪೂರ್ಣವಾಗಿ ಸಿದ್ಧಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಒಂದು ಕೆಪಿಎಸ್ ಶಾಲೆಯಲ್ಲಿ ಸುಮಾರು 1200 ಮಕ್ಕಳಿಗೆ ಪ್ರವೇಶಾವಕಾಶ ಕಲ್ಪಿಸಲಾಗುತ್ತದೆ. ಎಲ್‌ಕೆಜಿಯಿಂದ ಪಿಯುಸಿವರೆಗೆ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಒಂದೇ ಆವರಣದಲ್ಲಿ ಶಿಕ್ಷಣ ದೊರೆಯಲಿದೆ. ಈ ವರ್ಷವೇ 800 ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಟೆಂಡರ್ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸಿಎಂ ಸೂಚಿಸಿದರು.

ಕೆಪಿಎಸ್ ಶಾಲೆಗಳಿಗೆ ಶಾಲಾ ಬಸ್ ಸೌಲಭ್ಯ ಕಲ್ಪಿಸುವ ಸಾಧ್ಯತೆಗಳ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಶಿಕ್ಷಕರ ನೇಮಕಾತಿ ಕುರಿತ ಪ್ರಸ್ತಾವನೆಯನ್ನು ತಕ್ಷಣ ಆರ್ಥಿಕ ಇಲಾಖೆಗೆ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.

ಸಭೆಯಲ್ಲಿ ಈ ವರ್ಷದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶಗಳ ಸುಧಾರಣೆ ಕುರಿತು ವಿವರ ನೀಡಲಾಯಿತು. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ.94.10ಕ್ಕೆ ಏರಿಕೆಯಾಗಿ ಕಳೆದ ವರ್ಷಕ್ಕಿಂತ ಶೇ.14.06ರಷ್ಟು ಹೆಚ್ಚಳ ಕಂಡಿದೆ. ಪಿಯುಸಿ ಉತ್ತೀರ್ಣ ಪ್ರಮಾಣ ಶೇ.86.48ಕ್ಕೆ ಏರಿಕೆಯಾಗಿ ಶೇ.13ರಷ್ಟು ಸುಧಾರಣೆ ದಾಖಲಾಗಿದೆ.

ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳ ಸಂಖ್ಯೆ 2393ಕ್ಕೆ ಏರಿಕೆಯಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಪ್ರಮಾಣ ಗ್ರಾಮೀಣ ಭಾಗದಲ್ಲಿ ಶೇ.94.80 ದಾಖಲಾಗಿದೆ.

ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಫಲಿತಾಂಶದಲ್ಲೂ ಗಣನೀಯ ಏರಿಕೆ ಕಂಡುಬಂದಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳ ಜೊತೆಗೆ ಉಚಿತ ನೋಟ್ ಬುಕ್ ವಿತರಿಸುವ ಬೇಡಿಕೆಯನ್ನು ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯಾದ್ಯಂತ ಪೋಷಕರು-ಶಿಕ್ಷಕರ ಸಭೆ, ಅತಿಥಿ ಶಿಕ್ಷಕರ ನೇಮಕ, ಪೂರ್ವಭಾವಿ ಪರೀಕ್ಷೆಗಳು ಮತ್ತು ವಿಶೇಷ ತರಬೇತಿ ಕಾರ್ಯಕ್ರಮಗಳು ಉತ್ತಮ ಫಲಿತಾಂಶಕ್ಕೆ ಕಾರಣವಾಗಿವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

Related posts