ನೀಟ್ ವಿವಾದ: ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಬಗ್ಗೆ ತನಿಖೆಗೆ ಕೆ.ಸಿ. ವೇಣುಗೋಪಾಲ್ ಆಗ್ರಹ

ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆಗ್ರಹಿಸಿದ್ದಾರೆ.

ಇಂದಿರಾ ಗಾಂಧಿ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಪ್ರತಿಭಟನೆಗಳ ಸಂದರ್ಭದಲ್ಲಿ ಮೃತಪಟ್ಟ ನೀಟ್ ಅಭ್ಯರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

“ಇದು ಕಾಂಗ್ರೆಸ್‌ನ ಬೇಡಿಕೆಯಷ್ಟೇ ಅಲ್ಲ, ದೇಶದ ವಿದ್ಯಾರ್ಥಿಗಳು ಮತ್ತು ಸಂತ್ರಸ್ತ ಕುಟುಂಬಗಳ ಧ್ವನಿಯಾಗಿದೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಒಕ್ಕೊರಲಿನ ಆಗ್ರಹವಾಗಿದೆ” ಎಂದು ಹೇಳಿದರು.

ಈ ವೇಳೆ ಕಾಂಗ್ರೆಸ್‌ನ ‘ಸಂಘಟನ್ ಸೃಜನ್’ ಅಭಿಯಾನದ ಕುರಿತು ಮಾಹಿತಿ ನೀಡಿದ ವೇಣುಗೋಪಾಲ್, ದೇಶದಾದ್ಯಂತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಕರ್ನಾಟಕದಲ್ಲಿ ಆಗಸ್ಟ್ 24ರೊಳಗೆ ಡಿಸಿಸಿ ಅಧ್ಯಕ್ಷರ ನೇಮಕ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದರು. ಹೊಸ ಅಧ್ಯಕ್ಷರ ಆಯ್ಕೆಯಲ್ಲಿ ಯುವ ನಾಯಕರು ಮತ್ತು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಕೇಂದ್ರ ಸರ್ಕಾರ ನೀಟ್ ವಿವಾದವನ್ನು ಸಮರ್ಪಕವಾಗಿ ನಿಭಾಯಿಸಿಲ್ಲ ಎಂದು ಆರೋಪಿಸಿದ ಅವರು, ಸಂಸತ್ತಿನಲ್ಲಿ ಈ ವಿಷಯದ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಿಲ್ಲ ಎಂದು ಟೀಕಿಸಿದರು. ವಿದ್ಯಾರ್ಥಿಗಳ ಭವಿಷ್ಯದ ವಿಚಾರದಲ್ಲಿ ಕೇಂದ್ರ ಸರ್ಕಾರ ಅಸೂಕ್ಷ್ಮವಾಗಿ ವರ್ತಿಸುತ್ತಿದೆ ಎಂದು ದೂರಿದರು.

Related posts