ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಶಹಾಪುರ ತಾಲೂಕಿನ ಮಡ್ನಾಳ ಬಳಿ ನಡೆದಿದೆ.

ಮೃತರನ್ನು ಭಾಗ್ಯಶ್ರೀ (35), ಸತ್ಯಮ್ಮ (30) ಹಾಗೂ ಹೊನ್ನಿಂಗಮ್ಮ (18) ಎಂದು ಗುರುತಿಸಲಾಗಿದೆ. ಇವರು ಬೊಲೆರೊ ವಾಹನದಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಎಂಟು ಮಂದಿ ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಘಟನೆ ಕುರಿತು ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts